ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಗಾಳಿ ಬಿಸಿಯಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರು ಭೇಟಿ ನೀಡಿದ್ದ ವೇಳೆ ತಮ್ಮನ್ನು ಭೇಟಿ ಮಾಡಿದ ಪಕ್ಷದ ಹಿರಿಯ ನಾಯಕರಿಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸಂದೇಶ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ವೈ ವಿಜಯೇಂದ್ರ ನೇಮಕವಾದ ಬಳಿಕ ಪಕ್ಷದೊಳಗಿನ ಕೆಲವು ನಾಯಕರು ಅಸಮಾಧಾನ ವ್ಯಕ್ತವಾಗಿದ್ದು ಹಲವು ನಾಯಕರು ಬಹಿರಂಗವಾಗಿ ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ್ದರು.
ಇದೇ ವೇಳೆ ಮಾಜಿ ಸಂಸದ ಜಿ ಎಂ ಸಿದ್ದೇಶ್ವರ್ ಅವರ ಮನೆಯಲ್ಲಿ ಕೆಲವು ಅಸಮಾಧನಿತ ನಾಯಕರು ಸಭೆ ನಡೆಸಿ ಅಮಿತ್ ಶಾಗೆ ದೂರು ನೀಡಲು ನಿರ್ಧರಿಸಿದ್ದರು. ಆದರೆ ಭಿನ್ನರ ಭೇಟಿಗೆ ಅಮಿತ ಶಾ ನಿರಾಕರಿಸಿದರು ಎಂದು ತಿಳಿದು ಬಂದಿದೆ.
ಈ ಎಲ್ಲ ವಿದ್ಯಮಾನಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕ ಅರವಿಂದ ಬೆಲ್ಲದ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯ ರಾಜಕೀಯ ಸ್ಥಿತಿ, ಪಕ್ಷದ ಒಳಗೆ ನಡೆದಿರುವ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಅಮಿತ್ ಶಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟವನ್ನು ಗಟ್ಟಿಯಾಗಿ ಮುಂದುವರೆಸಬೇಕೆಂದು ಅಮಿತ್ ಶಾ ಸಲಹೆ ನೀಡಿದ್ದಾರೆ. ಪಕ್ಷದ ಶಿಸ್ತು, ಸಮನ್ವಯ ಹಾಗೂ ಸಂಘಟನೆಯ ಶಕ್ತಿ ಹೆಚ್ಚಿಸಲು ಕಾರ್ಯಕ್ರಮ ರೂಪಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa