ಬಳ್ಳಾರಿ, 21 ಜೂನ್ (ಹಿ.ಸ.) :
ಆ್ಯಂಕರ್ : ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷನಾಗಿ ನಾನು, ಆಯ್ಕೆ ಆಗಿದ್ದಾಗಿನಿಂದಲೂ ಎಸ್.ಜಿ. ಸಿದ್ದರಾಮಯ್ಯ, ವಸುಂದರ ಭೂಪತಿ, ಜಯಪ್ರಕಾಶ್ ಗೌಡ ಸೇರಿ ಹಲವರು ನನ್ನನ್ನು ಕಾರಣವಿಲ್ಲದೆ ದೂಷಣೆ ಮಾಡುತ್ತಿದ್ದು, ನನ್ನ ವಿರುದ್ಧ ಅಕ್ರಮದ ದಾಖಲೆಗಳಿದ್ದಲ್ಲಿ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಾಡೋಜ ಡಾ. ಮಹೇಶ್ ಜೋಶಿ ಅವರು ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಸಾಹಿತ್ಯ ವಲಯದ ಒಂದು ಗುಂಪು ನನ್ನನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಅಕ್ರಮವನ್ನೂ ನಡೆಸಿಲ್ಲ. ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿಯನ್ನು ನನ್ನ ಅನುಕೂಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಿಕೊಳ್ಳುತ್ತಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದ ಬೈಲಾವನ್ನು ತಿದ್ದುಪಡಿ ಮಾಡಲಾಗುತ್ತಿದೆ ಎಂದರು.
ಜೂನ್ 26ರಂದು ಸಂಡೂರಿನಲ್ಲಿ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಾಹಿತ್ತಿಕ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ವ ಸದಸ್ಯರ ಸಭೆಯನ್ನು ಏರ್ಪಡಿಸಲಾಗಿದೆ. ಕೇಂದ್ರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಿದೆ ಎಂದರು.
ಚಿತ್ರನಟ ಕಮಲಹಾಸನ್ ಅವರ ವಿವಾದತ್ಮಕ ಹೇಳಿಕೆ ವಿರುದ್ಧ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪಿಐಎಲ್ ಸಲ್ಲಿಸಿದೆ. ಬಳ್ಳಾರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರೂಪುರೇಷೆಗಳನ್ನು ಶೀಘ್ರದಲ್ಲಿ ರೂಪಿಸಲಾಗುವುದು ಎಂದರು.
ಕೇಂದ್ರ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಹಾಸನ ಜಿಲ್ಲಾಧ್ಯಕ್ಷ ಮಲ್ಲೇಶ್, ಚಿತ್ರದುರ್ಗದ ಶಿವ ಸ್ವಾಮಿ, ದಾವಣಗೆರೆಯ ವಾಮದೇವಪ್ಪ, ನೈಬಿಸಾಬ್ ಕುಷ್ಟಗಿ, ಬಳ್ಳಾರಿ ಕಸಾಪ ಜಿಲ್ಲಾಧ್ಯಕ್ಷ ನಿಷ್ಟಿ ರುದ್ರಪ್ಪ, ಜಿಲ್ಲಾ ಕಾರ್ಯದರ್ಶಿ ಹಂದಿಹಾಳ್ ಶಿವಲಿಂಗಪ್ಪ ಸೇರಿ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್