ರಾಯಚೂರು , 21 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ರಾಯಚೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯೋಗ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 11ನೇ ಯೋಗ ದಿನಾಚರಣೆಯ ಅಂಗವಾಗಿ ಶನಿವಾರ ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.
ರಾಯಚೂರು ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ಮಹ್ಮಾತಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಸನಗಳ ಅಭ್ಯಾಸ ಮಾಡಿಸಿದರು.
ಯೋಗ ಶಿಕ್ಷಕರು ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಯೋಗ ಅಭ್ಯಾಸ ಮಾಡಿದರು. ನಂತರ ಯೋಗ ದಿನಾಚರಣೆ ಅಂಗವಾಗಿ ಆಯುಷ್ ಇಲಾಖೆಯಿಂದ ನಡೆಸಲಾಗಿದ್ದ ಯೋಗಾಸನ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ 28 ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವು ಬೆಳಿಗ್ಗೆ 6.30ಕ್ಕೆ ಆರಂಭವಾಯಿತು. ಆರಂಭದಲ್ಲಿ ಬ್ರಹ್ಮಕುಮಾರಿ ಈಶ್ವರಿ ಮಹಾವಿದ್ಯಾಲಯದ ಸಂಚಾಲಕಿ ಸ್ಮಿತಾ ಜೀ ಧ್ಯಾನ ಹೇಳಿಕೊಟ್ಟರು.
ಬೆಳಗ್ಗೆ 7 ಗಂಟೆಗೆ ಯೋಗ ಶಿಕ್ಷಕ ತಿಮ್ಮಪ್ಪ ಎನ್.ವಡ್ಡೇಪಲ್ಲಿ ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಡಾ.ಪೂಜಾ ಅವರು ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಶಿಷ್ಟಾಚಾರದ ಪ್ರಕಾರ ಯೋಗ ಪ್ರದರ್ಶನ ಹಾಗೂ ಯೋಗಾಸನವನ್ನು ಮಾಡಲಾಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಮಾತನಾಡಿ, ಯೋಗ ಮತ್ತು ಪ್ರಾಣಾಯಾಮ, ದ್ಯಾನ ದಿನ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಈ ವೇಳೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಅವರು ಮಾತನಾಡಿ, ಯೋಗ ಭಾರತದ ಪ್ರತೀಕವಾಗಿದೆ. ಯೋಗ ಎಲ್ಲರ ಕಲ್ಯಾಣ ಭಾವನೆ ಆಗಿದೆ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನ ಆಚರಣೆ ಮಾಡಲಾಗುತ್ತಿದೆ. ಯೋಗ ಜೀವನವನ್ನ ಪರಿಪೂರ್ಣ ಮಾಡುತ್ತದೆ. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಅನ್ನೋ ಘೋಷವಾಕ್ಯ ಉತ್ತಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸುಮಾರು 2,500 ಯೋಗ ಸಕ್ರಿಯರು ಮತ್ತು ಶಾಲಾ ಮಕ್ಕಳು ಬಾಗವಹಿಸಿ ಅಚ್ಚುಕಟ್ಟಾಗಿ ಯೋಗಸಾನಗಳನ್ನು ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ನಂತರ ಇವರೆಲ್ಲರಿಗೂ ಬಿಸ್ಕಟ, ಬಾಳೆಹಣ್ಣು ಮತ್ತು ಬಾದಾಮಿ ಹಾಲನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ಕ್ಷೇತ್ರಾ ಶಿಕ್ಷಣಾಧಿಕಾರಿ ಈರಣ್ಣ ಕೋಸಿಗೆ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ರಂಗಸ್ವಾಮಿ, ಪರಶುರಾಮ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಈರೇಶ್ ನಾಯ್ಕ, ವೈದ್ಯಾಧಿಕಾರಿ ಡಾ.ದುರುಗಪ್ಪ, ಡಾ.ಅಮೀನುದ್ದೀನ್ ಮಹಮ್ಮದ್ ಅಸ್ಲಾಂ, ಡಾ.ಎನ್.ಡಿ.ನವೀನ್ ಸೇರಿದಂತೆ ಜಿಲ್ಲಾ ಆಯುಷ್ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು, ಯೋಗಪಟುಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್