ರಾಯಚೂರು , 26 ಜೂನ್ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಸಹಕಾರ ಅಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಹೇಳಿದ್ದಾರೆ.
ಜೂನ್ 26ರ ಗುರುವಾರ ನಗರದ ಇನ್ ಫ್ಯಾಂಟ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಅತ್ಯಂತ ಜಾಗೃತರಾಗಿರಬೇಕು. ಮಕ್ಕಳೇ ಈ ದೇಶದ ಆಸ್ತಿಯಾಗಿದ್ದು, ಇಂದು ಮಕ್ಕಳು ಹಾದಿ ತಪ್ಪುತ್ತಿರುವುದು ಕಳವಳಕಾರಿಯಾಗಿದೆ. ಪೋಷಕರು ಮಕ್ಕಳ ಮುಂದೆ ಮಾದಕ ವಸ್ತುಗಳ ಸೇವನೆ, ಮದ್ಯಪಾನ ಮಾಡಬಾರದು.ಈ ವ್ಯಸನವವು ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನೇ ಹಾಳು ಮಾಡುತ್ತದೆ. ಈ ದಿನದ ಪ್ರಮುಖ ಉದ್ದೇಶ ಜನರನ್ನು ಮಾದಕ ವಸ್ತುಗಳಿಂದ ದೂರವಿಡುವುದು ಮತ್ತು ಮಾದಕ ವಸ್ತು ಕಳ್ಳಸಾಗಣೆ ತಡೆಯುವುದು. ಈ ಕ್ರಮವು ಮಕ್ಕಳು ಮತ್ತು ಯುವ ಜನರ ಭವಿಷ್ಯವನ್ನು ಉಜ್ವಲವಾಗಿಸುಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಮಾತನಾಡಿ, ಮಾದಕ ವಸ್ತುಗಳ ಸಾಗಣೆ ತಡೆಗೆ ಜಿಲ್ಲಾ ಪೆÇಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಗಳು ನಿರಂತರ ಕ್ರಮ ವಹಿಸುತ್ತಿವೆ. ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿದಲ್ಲಿ ಮಕ್ಕಳು ದಾರಿ ತಪ್ಪುವುದಿಲ್ಲ ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, ರಾಯಚೂರ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆಯ ಜಾಲ ಬೇಧಿಸಿ, ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಕಠಿಣ ಕ್ರಮ ವಹಿಸಲಾಗುವುದು ಎಂದರು. ಈ ಬಗ್ಗೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿದಿನ ಈ ಬಗ್ಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.
ಪ್ರತಿಜ್ಞಾವಿಧಿ ಬೋಧನೆ: ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ, ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ನಾವು ಗಾಂಜಾ, ಅಫೀಮುದಂತಹ ಮಾದಕ ದ್ರವ್ಯಗಳನ್ನು ಸೇವಿಸುವುದಿಲ್ಲ. ಇತರರು ಸೇವಿಸದಂತೆ ಶ್ರಮಿಸುತ್ತೇವೆ ಎಂಬ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪವನ ಕುಮಾರ್, ಅಬಕಾರಿ ಉಪ ಆಯುಕ್ತರಾದ ಸಿ.ಕೆ.ಮಹೇಶ, ಡಿವೈಎಸ್ಪಿ ಶಾಂತವೀರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವೀನ ಕುಮಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಮನೋವೈದ್ಯ ಡಾ.ಮನೋಹರ್ ವೈ.ಪತ್ತಾರ್, ಸೈಕಾಲಾಜಿಸ್ಟ್ ಡಾ.ಮಹೇಶ್ ಕುಮಾರ್, ಇನ್ಫೆಂಟ್ ಶಾಲೆಯ ಫಾದರ್ ಸ್ಯಾಮ್ಯುಯೆನ್ಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಪ್ರಾಚಾರ್ಯ ಕುಂಟೇಪ್ಪ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ನಿಲಯಪಾಲಕರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್