ಗದಗ, 25 ಜುಲೈ (ಹಿ.ಸ.) :
ಆ್ಯಂಕರ್ : ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅರಿತುಕೊಳ್ಳುವಲ್ಲಿ ಹಾಗೂ ಅದರ ಸದುಪಯೋಗ ಪಡೆದುಕೊಳ್ಳುವಲ್ಲಿ ಶಾಲಾ ಸಂಸತ್ತು ಅತ್ಯಗತ್ಯ ಎಂದು ಎಸ್.ಎಸ್.ಕೆ. ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ಚೇರಮನ್ನರಾದ ಜಿ.ವಿ.ಬಸವಾ ಅವರು ಅಭಿಪ್ರಾಯಪಟ್ಟರು.
ಗದಗ ಬೆಟಗೇರಿಯ ಎಸ್ ಎಸ್ ಕೆ ಜಗದಂಬಾ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಶಾಲಾ ಮಕ್ಕಳ ಸಂಸತ್ತಿನ ಪ್ರತಿಜ್ಞಾವಿಧಿ ಸಮಾರಂಭದಲ್ಲಿ ಮಾತನಾಡಿ ಶಾಲಾ ಸಂಸತ್ತಿನ ಚುನಾವಣೆಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ಹಿತಾಸಕ್ತಿಗಳನ್ನು ಪ್ರತಿಪಾದಿಸುವ ಮತ್ತು ಶಾಲಾ ಸಮುದಾಯದೊಳಗಿನ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ಮಾಡಿಕೊಡುತ್ತವೆ. ಈ ಪ್ರತಿನಿಧಿಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ.
ಇಂತಹ ಚುನಾವಣೆಗಳು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆ, ಪ್ರಚಾರ ಮತ್ತು ನಾಯಕತ್ವದ ಬಗ್ಗೆ ಕಲಿಯಲು ಅಮೂಲ್ಯವಾದ ಅವಕಾಶಗಳನ್ನು ಒದಗಿಸುತ್ತವೆ. ಇದು ಆರೋಗ್ಯಕರ ಸ್ಪರ್ಧೆಯನ್ನು ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಸಾರ್ವಜನಿಕ ಭಾಷಣ, ಸಾಂಸ್ಥಿಕ ಮತ್ತು ತಂಡದ ಕೆಲಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಮಕ್ಕಳ ಸಂಸತ್ನಲ್ಲಿ ಮಕ್ಕಳೇ ಸಂಪೂರ್ಣ ಭಾಗೀದಾರರಾಗಿರುತ್ತಾರೆ. ತಮ್ಮ ಹಕ್ಕುಗಳನ್ನು ಪಡೆಯುವ ಮೂಲಕ ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿ ಕಲಿಯುವ ವೇದಿಕೆ. ಮಕ್ಕಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಣ ಮೌಲ್ಯವಾಗಿದೆ. ಹೀಗಾಗಿ ಶಾಲಾ ಸಂಸತ್ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಬೆಟಗೇರಿ ಎಸ್.ಎಸ್.ಕೆ. ಪಂಚ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಲೋಕನಾಥ ಕಬಾಡಿ ಇವರು ಮಾತನಾಡಿ ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಅಭಿವೃದ್ಧಿಪಡಿಸುವ ಅಗತ್ಯತೆ ಎದ್ದುಕಾಣುತ್ತಿದೆ. ಮಕ್ಕಳಲ್ಲಿ ಇಂತಹ ಗುಣಗಳನ್ನು ಬೆಳೆಸುವಲ್ಲಿ ಮಕ್ಕಳ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಪವಾರ ಅವರು ಮಾತನಾಡಿ ಶಾಲಾ ಸಿಬ್ಬಂದಿ ಜೊತೆ ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನೂ ಪಾಲುದಾರರನ್ನಾಗಿ ಮಾಡುವುದು ಶಾಲಾ ಸಂಸತ್ತಿನ ರಚನೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷಕರು ಹಾಗೂ ಮಕ್ಕಳ ನಡುವಿನ ಬಾಂಧವ್ಯ ಉತ್ತಮಗೊಳಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ತಮ್ಮ ಜವಾಬ್ದಾರಿ ಅರಿಯಲು ಸಹಕಾರಿಯಾಗಿದೆ. ಪಂಚ ಟ್ರಸ್ಟ್ ಕಮಿಟಿಯ ಉಪಾಧ್ಯಕ್ಷರಾದ ದತ್ತು
ಈ ಸಂದರ್ಭದಲ್ಲಿ ಶಾಲಾ ಸಂಸತ್ತಿಗೆ ಆಯ್ಕೆಯಾದ ಮಕ್ಕಳಿಂದ ಪ್ರತಿಜ್ಞಾವಿಧಿ ಜರುಗಿತು. ಕಾರ್ಯಕ್ರಮದಲ್ಲಿ ಬೆಟಗೇರಿ ಎಸ್.ಎಸ್.ಕೆ. ಪಂಜೆ ಟ್ರಸ್ಟ್ ಕಮಿಟಿ, ತರುಣ ಸಂಘ, ಮಹಿಳಾ ಮಂಡಳದ ಪದಾಧಿಕಾರಿಗಳು, ಸದಸ್ಯರು ಹಾಗೂ ಎಸ್.ಎಸ್.ಕೆ. ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ಪಾಲಕರು ಹಾಗೂ ಮಕ್ಕಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP