ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸೌಹಾರ್ದ ವಾಗಿ ಆಚರಿಸಿ : ಜಿಲ್ಲಾಧಿಕಾರಿ ಸೂಚನೆ
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸೌಹಾರ್ದ ವಾಗಿ ಆಚರಿಸಿ :ಶಾಂತಿಪಾಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಮಾತನಾಡಿದರು.


ಕೋಲಾರ, ೧೮ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು’ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹೇಳಿದರು.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

‘ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಎಲ್ಲ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ರಸ್ತೆ ಮಧ್ಯೆ ಗಣೇಶನ ಪ್ರತಿಷ್ಠಾಪನೆ ಮಾಡಿದರೆ ಸುಗಮ ಸಂಚಾರಕ್ಕೆ ತೊಂದರೆಯಾಗಲಿದೆ. ಹೀಗಾಗಿ ರಸ್ತೆ ನಡುವೆ ಗಣೇಶನನ್ನು ಕೂಡಿಸುವುದು ಬೇಡ. ಗಣೇಶನ ಪ್ರತಿಷ್ಠಾಪನೆಗೆ ಪೂರ್ವ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ’ ಎಂದು ಹೇಳಿದರು.

ಗಣೇಶ ವಿಸರ್ಜನೆಯ ದಿನಗಳಂದು ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಬೆಸ್ಕಾಂ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನ ಸಂಚಾರಕ್ಕೆ ಅಡೆತಡೆಯಾಗದಂತೆ ಮೊದಲೇ ಸಂಚಾರ ಮಾರ್ಗ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಬೇಕು’ ಎಂದರು.

ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಏಕ ಗವಾಕ್ಷಿಯಲ್ಲಿ ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ವಹಿಸಬೇಕು. ರಾತ್ರಿ ೧೦.೩೦ರೊಳಗಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ಸೂಚಿಸಿದರು.

ಮಾಲಿನ್ಯ ನಿಯಂತ್ರಣ ಅಧಿಕಾರಿ ರಾಜು ಮಾತನಾಡಿ ‘ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಪಿಒಪಿ ಗಣೇಶ ಮೂರ್ತಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಕೋಲಾರ ನಗರದ ಜನತೆ ಸಹಕಾರ ನೀಡಬೇಕು ಎಂದು ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಕೋಲಾರ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಕೆ.ಜಿ.ಎಫ್ ವರಿಷ್ಟಾಧಿಕಾರಿ ಶಿವಾಂಶು ರಜಪೂತ, ಅಪರ ಜಿಲ್ಲಾಧಿಕಾರಿ ಮಂಗಳ ಉಪ ವಿಭಾಗಾಧಿಕಾರಿ ಡಾ. ಮೈತ್ರಿ, ಪೊಲೀಸ್ ಉಪಾಧಿಕ್ಷಕ ಹೆಚ್.ಎಂ. ನಾಗ್ತೇ, ಎಲ್ಲಾ ತಾಲ್ಲೂಕಿನ ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಣೇಶ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಗಿ ಪೊಲೀಸ್ ಬಂದೋಬಸ್ತ್ : ಗಣೇಶೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ.ನಿಖಿಲ್ ಅವರು ತಿಳಿಸಿದರು.

ಸೆಪ್ಟೆಂಬರ್ ೪ರಂದು ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯಾಗಲಿವೆ ಮರುದಿನ ಸೆ.೫ಕ್ಕೆ ಈದ್ ಮಿಲಾದ್ ಇರುವ ಕಾರಣ ಪೊಲೀಸ್ ಬಂದೋಬಸ್ತ್ಗೆ ಒತ್ತಡ ಬೀಳಲಿದೆ. ಒಂಬತ್ತನೇ ದಿನದ ಗಣೇಶ ಮೂರ್ತಿಗಳನ್ನು ಬೇಗ ವಿಸರ್ಜನೆ ಮಾಡಬೇಕು ಎಂದು ಹೇಳಿದರು.

ಮುಖಂಡರುಗಳು ಮಾತನಾಡಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳು ಇಲಾಖೆಗಳೊಂದಿಗೆ ಸಹಕರಿಸಲಿವೆ ಎಂದು ತಿಳಿಸಿದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande