ಕೋಲಾರ, ೦೬.ಆಗಸ್ಟ್ (ಹಿ.ಸ.) :
ಆ್ಯಂಕರ್ : ದೇವರಾಜು ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಇಂದಿನ ಮಕ್ಕಳಿಗೆ ದಾರಿದೀಪ ಆಗುವಂತೆ ಉಪನ್ಯಾಸ ನೀಡಿ ಮತ್ತು ಮಾರ್ಗದರ್ಶನ ಆಗುವಂತೆ ಅರ್ಥಪೂರ್ಣವಾಗಿ ೧೧೦ ನೇ ಜನ್ಮ ದಿನವನ್ನು ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ ಇದೇ ತಿಂಗಳು ೨೦ ರಂದು ನಡೆಯಲಿರುವ ದೇವರಾಜು ಅರಸು ಅವರ ೧೧೦ ನೇ ಜಯಂತಿ ಆಚರಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದರು.
ದೇವರಾಜು ಅರಸು ಅವರ ಜಯಂತಿ ಪ್ರಯುಕ್ತ ದಿನಾಂಕ ೨೦ ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು ಕಛೇರಿಗಳಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಜಯಂತಿ ಕಾರ್ಯಕ್ರಮವನ್ನು ಎಲ್ಲೆಡೆಯೂ ಆಚರಿಸಬೇಕು ಎಂದು ತಿಳಿಸಿದರು.
ಎಲ್ಲ ಇಲಾಖೆಗಳಿಂದ ಜಯಂತಿಯಂದು ಬೆಳಿಗ್ಗೆ ೯.೩೦ ಸ್ತಬ್ಧಚಿತ್ರಗಳನ್ನು ಮಾಡಬೇಕು ನಂತರ ಟಿ.ಚನ್ನಯ್ಯ ರಂಗಮಂದಿರದಲ್ಲಿ ೧೦ ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಸಾಂಸ್ಕೃತಿಕ ಕಲಾ ತಂಡಗಳಾದ ಡೊಳ್ಳುಕುಣಿತ,ತಮಟೆ ವಾದ್ಯ,ವೀರಗಾಸೆ ಇತ್ಯಾದಿ ತಂಡಗಳನ್ನು ನಿಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ತಿಳಿಸಿ, ಆಹ್ವಾನ ಪತ್ರಿಕೆಗಳ ಮುದ್ರಣ ಮಾಡುವ ಕುರಿತು ಹಾಗೂ ಶಿಷ್ಟಾಚಾರ ಪಾಲನೆ ಮಾಡುವಂತೆ ತಿಳಿಸಿದರು.
ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ ರಸಪ್ರಶ್ನೆ , ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು ಎಂದರು.
೨೦೨೪-೨೫ನೇ ಹಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತ್ಯುನ್ಯತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದರು.
ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಸಂಘ ಸಂಸ್ಥೆಗಳ ಹಾಗೂ ಅಧಿಕಾರಿಗಳ ಸಭೆಯನ್ನು ಕರೆದು ಸಮಾಲೋಚಿಸಿ ಅರ್ಥಪೂರ್ಣವಾಗಿ ಜನ್ಮದಿನಾಚರಣೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೀತಮ್ಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್, ಅಂಗವಿಕಲರ ಕಲ್ಯಾಣ ಅಧಿಕಾರಿ ಮಂಜುಳ, ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ, ಯುವಜನ ಮತ್ತು ಕ್ರೀಡಾ ಇಲಾಖೆ ಗೀತಾ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಪ್ರಸಾದ್ ಬಾಬು, ಉಪಾಧ್ಯಕ್ಷರಾದ ನಂದೀಶ್, ಫಾಲ್ಗುಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ದೇವರಾಜು ಅರಸು ಜಯಂತಿ ಪ್ರಯುಕ್ತ ಅಪರ ಜಿಲ್ಲಾಧಿಕಾರಿ ಮಂಗಳ ಪೂರ್ವಭಾವಿ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್