ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೃಷ್ಣಾ ಕಚೇರಿಯಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದರು.
ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ನಡೆಸಬೇಕಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆಗೆ 1,20,728 ಗಣತಿದಾರರನ್ನು ನಿಯೋಜಿಸಲಾಗಿದ್ದು, 1,22,085 ಗಣತಿ ಬ್ಲಾಕ್ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರೊಳಗೆ ಕಾರ್ಯ ಪೂರ್ಣಗೊಳ್ಳಬೇಕೆಂದು ಮುಖ್ಯಮಂತ್ರಿ ಸ್ಪಷ್ಟ ನಿರ್ದೇಶನ ನೀಡಿದರು.
ಗಣತಿದಾರರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತಮ್ಮ ಕರ್ತವ್ಯವನ್ನು ನಿರ್ಲಕ್ಷ್ಯ ಮಾಡಬಾರದು, ಅಸಹಕಾರ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗೌರವಧನ ಈಗಾಗಲೇ ಬಿಡುಗಡೆ ಮಾಡಲಾಗಿದೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.
ಸಮೀಕ್ಷೆ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿದಿನ ಪರಿಶೀಲಿಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸೂಚಿಸಿದರು.
ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸುಮಾರು 50 ಲಕ್ಷ ಮನೆಗಳ ಸಮೀಕ್ಷೆ ಇಂದಿನಿಂದ ಆರಂಭವಾಗಿದ್ದು, ಯಾವ ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಗುಡ್ಡಗಾಡು ಪ್ರದೇಶಗಳಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಸಹ ಜನರು ಪಾಲ್ಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ದಿನಕ್ಕೆ ಕನಿಷ್ಠ ಶೇಕಡಾ 10ರಷ್ಟು ಗುರಿ ಸಾಧಿಸಬೇಕೆಂದು ಮುಖ್ಯಮಂತ್ರಿ ಹೇಳಿದರು. ಸಮೀಕ್ಷೆ ಕಾರ್ಯ ಗಂಭೀರವಾಗಿ ನಡೆಯದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa