ಮಂಗಳೂರು, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಬಂಧಿತ ಚಿನ್ನಯ್ಯನನ್ನು ಮತ್ತೆ ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.
12 ದಿನಗಳ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶ ವಿಜಯಾನಂದ ಟಿ ಅವರ ಮುಂದೆ ಹಾಜರುಪಡಿಸಲಾಯಿತು.
ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ, ಸರ್ಕಾರಿ ಅಭಿಯೋಜಕರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಹಾಜರಿದ್ದ ಸಂದರ್ಭದಲ್ಲಿ ಕೋರ್ಟ್ ಬಾಗಿಲುಗಳನ್ನು ಮುಚ್ಚಿ ವಿಚಾರಣೆ ನಡೆಸಲಾಯಿತು. ವಿಚಾರಣೆಗೆ ಮುನ್ನ ಸರ್ಕಾರಿ ಅಭಿಯೋಜಕರು ಎಸ್ಐಟಿ ತನಿಖಾ ಪ್ರಗತಿ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಸಾಕ್ಷಿ ಸಂಗ್ರಹಣೆ ಹಾಗೂ ಬಾಕಿ ವಿಚಾರಣೆಗಳ ವಿವರಗಳನ್ನು ನ್ಯಾಯಾಲಯಕ್ಕೆ ನೀಡಲಾಯಿತು.
ಈ ವೇಳೆ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಚಿನ್ನಯ್ಯ ಪರವಾಗಿ ವಾದ ಮಂಡಿಸಿದರು.
ಸರ್ಕಾರಿ ವಕೀಲರು ದೆಹಲಿ, ತಮಿಳುನಾಡಿನಲ್ಲಿ ಮಹಜರು ನಡೆಸಬೇಕಿರುವುದರಿಂದ ಮತ್ತೆ ಎಸ್ಐಟಿ ವಶಕ್ಕೆ ನೀಡುವಂತೆ ಮನವಿ ಮಾಡಿದರು.
ವಾದ–ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಾಲಯ ನಾಲ್ಕು ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa