
ಧಾರವಾಡ, 12 ಜನವರಿ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ನಾವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ರುದ್ರಾನಂದಸ್ವಾಮಿ ಮಠದ ಆವರಣದಲ್ಲಿ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು.
ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಎಫ್.ಎಚ್. ಜಕ್ಕಪ್ಪನವರ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭುವನೇಶ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಿತು.
ಸಭೆಯಲ್ಲಿ ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಮೂಲಸೌಕರ್ಯ ಕೊರತೆ, ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಸಂಬಂಧಿತ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದರು. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳು ಸೂಚನೆ ನೀಡಿದರು.
ಈ ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಅಣ್ಣಿಗೇರಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮೀಣ ಮತ್ತು ನಗರಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಅಣ್ಣಿಗೇರಿ ಸಿಬ್ಬಂದಿ, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa