
ಬೆಂಗಳೂರು, 14 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾದೇಶಿ ವಲಸಿಗರು ನೆಲೆಸಿರುವ ಗಂಭೀರ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಉದ್ದೇಶಿಸಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಅಕ್ರಮ ವಲಸಿಗರೇ ಸ್ವತಃ ತಮ್ಮ ಸಂಖ್ಯೆ ಹೆಚ್ಚಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಹೇಳಿದರು.
ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಸೇರಿದಂತೆ ದಾಖಲೆಗಳನ್ನು ಬಳಸಿ ಮಾನವ ಕಳ್ಳಸಾಗಣೆ ಮುಂತಾದ ಗಂಭೀರ ಅಪರಾಧಗಳಲ್ಲಿ ತೊಡಗಿರುವ ನುಸುಳುಕೋರರು ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೋರುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಅಶೋಕ ಹೇಳಿದರು.
ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರೆದರೆ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಾರೀ ಅಪಾಯ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರವು ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ಮತ್ತು ತುಷ್ಟೀಕರಣದ ನೀತಿಗಳನ್ನು ಬಿಟ್ಟು ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ವಲಸಿಗರ ಪತ್ತೆ ಹಾಗೂ ಗಡೀಪಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa