
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ಜನಸಾಮಾನ್ಯರ ಜೊತೆಗೆ ಸರ್ಕಾರಿ ನೌಕರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ರಾಜ್ಯದ ಆರೋಗ್ಯ ಸೇವೆಯ ಬೆನ್ನೆಲುಬಾಗಿರುವ ಸುಮಾರು 30,000 ನರ್ಸ್ಗಳಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಸಲಾಗಿಲ್ಲ, ಇದು ಅಮಾನವೀಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ. ದಿವಾಳಿ ಅಂಚಿನಲ್ಲಿರುವ ಕಾಂಗ್ರೆಸ್ ಸರ್ಕಾರ ಶ್ರಮಜೀವಿಗಳ ಮೂಲಭೂತ ಹಕ್ಕುಗಳನ್ನೂ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 980 ಗ್ರಾಮ ಪಂಚಾಯತ್ ಪಿಡಿಒ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಸರ್ಕಾರ ವಿಫಲವಾಗಿದೆ, ಇದರಿಂದ ಗ್ರಾಮೀಣಾಭಿವೃದ್ಧಿ ಪ್ರಕ್ರಿಯೆಯೇ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸರ್ಕಾರ ಭ್ರಷ್ಟಾಚಾರ, ಓಲೈಕೆ ರಾಜಕೀಯ, ಗ್ಯಾರಂಟಿಗಳ ಪ್ರಚಾರ, ಒಳಜಗಳ ಹಾಗೂ ಕೇಂದ್ರ ಸರ್ಕಾರದೊಂದಿಗೆ ರಾಜಕೀಯ ಸಂಘರ್ಷಗಳಲ್ಲೇ ತೊಡಗಿದ್ದು, ಜನರ ನಿಜವಾದ ನೋವುಗಳು ಆಡಳಿತಕ್ಕೆ ಕಾಣಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ವಿಶೇಷವಾಗಿ ಆರೋಗ್ಯ ಸೇವೆಯಲ್ಲಿರುವ ಶ್ರಮಿಕರಿಗೆ ಕನಿಷ್ಠ ಸಂಬಳವನ್ನೂ ನೀಡಲಾಗದಿರುವುದು ಸರ್ಕಾರದ ಆಡಳಿತ ಅಸಮರ್ಥತೆಯನ್ನು ತೋರಿಸುತ್ತದೆ ಎಂದಿದ್ದಾರೆ.
ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು ಹಾಗೂ ಜಡಗಟ್ಟಿರುವ ಆಡಳಿತ ಯಂತ್ರಕ್ಕೆ ಚೈತನ್ಯ ತುಂಬಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa