ಜ.೨೪ರಂದು 42,345 ಮನೆಗಳ ಹಂಚಿಕೆ : ಸಚಿವ ಜಮೀರ್ ಅಹ್ಮದ್ ಖಾನ್
ಹುಬ್ಬಳ್ಳಿ, 17 ಜನವರಿ (ಹಿ.ಸ.) : ಆ್ಯಂಕರ್ : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜನವರಿ 24 ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿ
House


ಹುಬ್ಬಳ್ಳಿ, 17 ಜನವರಿ (ಹಿ.ಸ.) :

ಆ್ಯಂಕರ್ : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜನವರಿ 24 ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.‌

ಇಂದು ಹುಬ್ಬಳಿಯ ಮಂಟೂರು ರಸ್ತೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ 36,789 ಮನೆಗಳನ್ನು ವಿತರಿಸಲಾಗಿದೆ. ಎರಡನೇ ಹಂತದಲ್ಲಿ 42,345 ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಮೂರನೇ ಹಂತದಲ್ಲಿ ಸುಮಾರು 30 ಸಾವಿರ ಮನೆಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೂರನೇ ಹಂತದ ಮನೆಗಳನ್ನು ಏಪ್ರೀಲ್, ಮೇ ತಿಂಗಳಲ್ಲಿ ವಿತರಿಸಲಾಗುವುದು. ಈಗ ನೀಡುತ್ತಿರುವ ಮನೆಗಳ ಪೈಕಿ ಹುಬ್ಬಳ್ಳಿಯಲ್ಲಿ 1,008 ಸೇರಿ ಧಾರವಾಡ ಜಿಲ್ಲೆಯಲ್ಲಿ 2,767 ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಯೋಜನೆಯಲ್ಲಿ ಒಟ್ಟು 1,80,253 ಮನೆಗಳ ನಿರ್ಮಾಣ ಆಗುತ್ತಿದೆ. ರಾಜ್ಯ ಸರ್ಕಾರ ತಲಾ 4 ಲಕ್ಷ ರೂ. ಕೊಡುತ್ತಿದ್ದು, ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಸಿಗಲಿದೆ. ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಳಗೇರಿ ವಾಸಿಗಳಿಗೆ 20,363 ಹಕ್ಕುಪತ್ರ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ ಸದಸ್ಯರಾದ ಅಬ್ದುಲ್ ಜಬ್ಬಾರ್, ಮಾಜಿ ಸಂಸದರಾದ ಐ.ಜಿ.ಸನದಿ, ಮಾಜಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಸದಾನಂದ ಡಂಗನವರ, ಮುಖಂಡರಾದ ಅನ್ವರ ಬಾಷಾ, ದೀಪಕ್ ಚಿಂಚೋರೆ, ಅಲ್ತಾಫ್ ಹಳ್ಳೂರ್, ಅನಿಲಕುಮಾರ ಪಾಟೀಲ್ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande