
ತಿರುವನಂತಪುರಂ, 23 ಜನವರಿ (ಹಿ.ಸ.):
ಆ್ಯಂಕರ್ : ಕೇರಳದಲ್ಲಿ ಆರಂಭಿಸಲಾದ ಅಭಿವೃದ್ಧಿ ಯೋಜನೆಗಳು ರಾಜ್ಯದ ಮೂಲಸೌಕರ್ಯವನ್ನು ಬಲಪಡಿಸಿ, ರೈಲು ಸಂಪರ್ಕವನ್ನು ಇನ್ನಷ್ಟು ಸಶಕ್ತಗೊಳಿಸುವುದರ ಜೊತೆಗೆ ಸಾಮಾನ್ಯ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಯೋಜನೆಗಳು ಕೇರಳದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿವೆ ಹಾಗೂ ‘ವಿಕಸಿತ ಭಾರತ’ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ಹೇಳಿದರು.
ತಿರುವನಂತಪುರಂನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳ ಆರಂಭ, ನಗರ ಜೀವನೋಪಾಯಕ್ಕೆ ಸಂಬಂಧಿಸಿದ ಯೋಜನೆಗಳು, ವಿಜ್ಞಾನ ಮತ್ತು ನವೋದ್ಯಮ ಕ್ಷೇತ್ರದ ಹೂಡಿಕೆಗಳು ಹಾಗೂ ಆರೋಗ್ಯ ಸೇವೆಗಳ ವಿಸ್ತರಣೆ ಕೇರಳವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ತಿರುವನಂತಪುರಂ ಭೇಟಿ ವೇಳೆ ಕೇರಳಕ್ಕೆ ರೈಲು ಸಂಪರ್ಕ, ನಗರ ಜೀವನೋಪಾಯ, ವಿಜ್ಞಾನ ಮತ್ತು ನವೋದ್ಯಮ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಅನೇಕ ಮಹತ್ವದ ಯೋಜನೆಗಳನ್ನು ಸಮರ್ಪಿಸಲಾಯಿತು. ಈ ಸಂದರ್ಭ ಪ್ರಧಾನಿ ಮೂರು ಅಮೃತ್ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ ಒಟ್ಟು ನಾಲ್ಕು ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿದರು ಹಾಗೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.
ಪ್ರಧಾನಿ, ನಾಗರಕೋಯಿಲ್–ಮಂಗಳೂರು, ತಿರುವನಂತಪುರಂ–ತಾಂಬರಂ ಮತ್ತು ತಿರುವನಂತಪುರಂ–ಚಾರ್ಲಪಳ್ಳಿ ಮಾರ್ಗಗಳಲ್ಲಿನ ಮೂರು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಉದ್ಘಾಟಿಸಿದರು. ಜೊತೆಗೆ ತ್ರಿಶೂರ್–ಗುರುವಾರಿಯೂರು ನಡುವಿನ ಹೊಸ ಪ್ರಯಾಣಿಕ ರೈಲು ಸೇವೆಯನ್ನೂ ಆರಂಭಿಸಿದರು. ಇದರಿಂದ ಕೇರಳದ ತಮಿಳುನಾಡು, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳೊಂದಿಗೆ ರೈಲು ಸಂಪರ್ಕ ಮತ್ತಷ್ಟು ಬಲಿಷ್ಠವಾಗಲಿದೆ. ಸುರಕ್ಷಿತ, ಕಡಿಮೆ ವೆಚ್ಚದ ಹಾಗೂ ಸಮಯಬದ್ಧ ಪ್ರಯಾಣ ಸೌಲಭ್ಯಗಳ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗ ಅವಕಾಶಗಳು ಹೆಚ್ಚುವ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa