
ಬೆಂಗಳೂರು, 08 ಜನವರಿ (ಹಿ.ಸ.);
ಆ್ಯಂಕರ್:ಕಾಂಗ್ರೆಸ್ ಅವಧಿಯಲ್ಲಿ ʼಮನರೇಗಾದಲ್ಲಿ ₹11 ಲಕ್ಷ ಕೋಟಿ ಮೊತ್ತದ ಭ್ರಷ್ಟಾಚಾರ ಆಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ ಎಐ ತಂತ್ರಜ್ಞಾನ, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿದ್ದು, ಕೆಲಸದ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತಿದೆ. ಮನರೇಗದಲ್ಲಿ ಹಣ ಹೊಡೆಯುತ್ತಿದ್ದ ಕಾಂಗ್ರೆಸ್ನ ಮಧ್ಯವರ್ತಿಗಳಿಗೆ ಇದುವೇ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ವಿರೋಧಿಸುತ್ತಿದ್ದಾರೆ ಎಂದರು.
ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ₹11 ಲಕ್ಷ ಕೋಟಿ ಮೊತ್ತದ ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ವಿರೋಧಿಸಿಲ್ಲ. 2013ರಲ್ಲಿ ಸಿಎಜಿ ಪ್ರಕಾರ ದೇಶದಲ್ಲಿ 4.33 ಲಕ್ಷ ನಕಲಿ ಜಾಬ್ ಕಾರ್ಡ್ ಗಳಿದ್ದವು. ಮೊದಲು ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಈಗ ಈ ಎಲ್ಲಾ ಅಕ್ರಮ, ಲೋಪಗಳಿಗೂ ತೆರೆ ಎಳೆಯಲೆಂದೇ ʼವಿಬಿಜಿ ರಾಮ್ ಜಿ ಕಾಯ್ದೆʼ ತಂದಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.
ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ ಕೂಲಿಕಾರರಿಗೆ 60 ದಿನಗಳ ಕಾಲ ಬಿಡುವು ಕೊಟ್ಟಿದ್ದಕ್ಕೆ ಕಾಂಗ್ರೆಸ್ಸಿಗರು ಕೃಷಿ ಮೇಲೆ ದುಷ್ಪರಿಣಾಮ ಎನ್ನುತ್ತಿದ್ದಾರೆ, ಹಾಗಾದರೆ ಇವರ ಕಾಲದಲ್ಲೇನು 365 ದಿನ ಕೆಲಸ ಕೊಡುತ್ತಿದ್ದರಾ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ಕಾಲದಲ್ಲಿ ಮನರೇಗಾದಲ್ಲಿ ಡಿಜಿಟಲ್ ಪೇಮೆಂಟ್ ಮಾಡುತ್ತಿರಲಿಲ್ಲ. ಇದೀಗ ತನ್ನ ಮಧ್ಯವರ್ತಿಗಳಿಗೆ ಅನುಕೂಲವಾಗಬೇಕೆಂಬ ನಿಲುವಿನಲ್ಲಿ ʼವಿಬಿಜಿ ರಾಮ್ ಜಿ ಕಾಯ್ದೆʼ ವಿರೋಧಿಸಿ ಹೋರಾಟ ಮಾಡುತ್ತಿದೆ ಎಂದು ಆರೋಪಿಸಿದರು.
ʼವಿಬಿಜಿ ರಾಮ್ ಜಿʼ ಕಾಯ್ದೆಯಲ್ಲಿ ಇನ್ನು 14 ದಿನದಲ್ಲೇ ಕೂಲಿ ಹಣ ಪಾವತಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ. ಮಾನಿಟರಿಂಗ್ ಜವಾಬ್ದಾರಿಯನ್ನು ಪಂಚಾಯತ್ಗೂ ಕೊಡಲಾಗಿದೆ. ಪ್ರತಿ ವಾರ ಕೆಲಸದ ವಿವರ ಬಹಿರಂಗಪಡಿಸಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇದರಲ್ಲಿ ಅಷ್ಟೊಂದು ವ್ಯವಸ್ಥಿತವಾಗಿ ಪಾರದರ್ಶಕತೆ ತರಲಾಗಿದೆ ಎಂದು ಜೋಶಿ ಸಮರ್ಥಿಸಿಕೊಂಡರು.
ಯುಪಿಎ ಅವಧಿಯಲ್ಲಿ ನರೇಗಾದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸಲಿಲ್ಲವೆಂದು ಕಾಂಗ್ರೆಸ್ ನ ಒಬ್ಬರಾದರೂ ಹೇಳಲಿ ನೋಡೋಣ ಎಂದು ಸವಾಲು ಹಾಕಿದ ಸಚಿವರು, ಇವರ ಅವಧಿಯಲ್ಲಿ ನರೇಗಾ ಸಿಬ್ಬಂದಿಗೆ ವೇತನವೇ ಸಿಗುತ್ತಿರಲಿಲ್ಲ. ಇನ್ನು ಯುಪಿಎ ಕಾಲದಲ್ಲಿ ರಕ್ಷಣಾ ವ್ಯವಸ್ಥೆಗೂ ಏನೂ ಮಾಡಲಿಲ್ಲ. ಆಗಿನ ರಕ್ಷಣಾ ಸಚಿವ ಆ್ಯಂಟನಿ ಅವರು ಹೈಕಮಾಂಡ್ಗೆ ಹೆದರಿ ಯಾವುದಕ್ಕೂ ಸಹಿ ಮಾಡುತ್ತಲೇ ಇರಲಿಲ್ಲ ಎಂದು ಟೀಕಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa