
ಮೈಸೂರು, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮೈಸೂರು ನಗರವನ್ನು ಮಾದಕ ಮುಕ್ತಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ‘ವಿಮುಕ್ತಿ’ ಅಭಿಯಾನದ ಅಂಗವಾಗಿ ಇಂದು ನಗರಾದ್ಯಂತ ಪೊಲೀಸ್ ಠಾಣಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ನಗರದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಜೆ.ಎಸ್.ಎಸ್. ಮೆಡಿಕಲ್ ಮತ್ತು ಫಾರ್ಮಸಿ ಕಾಲೇಜು, ಸೇಂಟ್ ಫಿಲೋಮಿನಾ ಕಾಲೇಜು, ಮಹಾರಾಣಿ ಪದವಿ ಪೂರ್ವ ಕಾಲೇಜು, ವಿವೇಕಾನಂದ ಕಾಲೇಜು, ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಹಾಗೂ ಮೈಸೂರು ಮೆಡಿಕಲ್ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಪೋಸ್ಟರ್ಗಳನ್ನು ಅಂಟಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ಇದೇ ವೇಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಾಗೂ ಸೇಂಟ್ ಫಿಲೋಮಿನಾ ಚರ್ಚ್ ಸೇರಿದಂತೆ ಜನಸಂಚಾರ ಹೆಚ್ಚಿರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನದಿಂದ ದೂರವಿರುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು.
ಮಾದಕ ವಸ್ತುಗಳ ಬಳಕೆ ಯುವಜನರ ಭವಿಷ್ಯವನ್ನು ಹಾಳು ಮಾಡುತ್ತದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ, ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪೊಲೀಸ್ ಇಲಾಖೆ ಕರೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa