
ಬೆಂಗಳೂರು, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸುಮಾರು 500 ವರ್ಷಗಳ ಪರಂಪರೆ ಹೊಂದಿರುವ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶ್ರೀ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯವು ಪ್ರಸಿದ್ಧ ಧಾರ್ಮಿಕ ಶ್ರದ್ದಾಕೇಂದ್ರವಾಗಿ ಹೆಸರುವಾಸಿಯಾಗಿದೆ. ಭೀಮಾ ಮತ್ತು ಅಮರಜ ನದಿಗಳ ಸಂಗಮವು ಇಲ್ಲಿನ ಧಾರ್ಮಿಕ ಮಹತ್ವವನ್ನು ಇನ್ನಷ್ಟು ಹೆಚ್ಚಿಸಿದ್ದು, ವರ್ಷಪೂರ್ತಿ ಅನೇಕ ಭಕ್ತಾದಿಗಳು ಆಗಮಿಸುತ್ತಾರೆ. ಇದೇ ತಾಲೂಕಿನ ಮತ್ತೊಂದು ಪ್ರಸಿದ್ಧ ಧಾರ್ಮಿಕ ಶ್ರದ್ದಾಕೇಂದ್ರವಾದ ಘತ್ತರಗಿ ಭಾಗಮ್ಮ ದೇವಾಲಯವೂ ಹೆಚ್ಚಿನ ಭಕ್ತ ಸಮೂಹವನ್ನು ಸೆಳೆಯುತ್ತಿದೆ.
ಈ ಎರಡು ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು, ರಸ್ತೆ, ಪಾರ್ಕಿಂಗ್, ಶೌಚಾಲಯ, ಕುಡಿಯುವ ನೀರು, ವಿಶ್ರಾಂತಿ ಮಂದಿರ, ವಸತಿ ವ್ಯವಸ್ಥೆ ಸೇರಿದಂತೆ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾರ್ಯಯೋಜನೆ ರೂಪಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಅಫಜಲಪುರ ಕ್ಷೇತ್ರದ ಶಾಸಕರಾದ ಎಂ.ವೈ. ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ತಜ್ಞರು ಸಿದ್ಧಪಡಿಸಿರುವ ನೀಲನಕ್ಷೆಯನ್ನು ಅವಲೋಕಿಸಿದರು.
ಕ್ಷೇತ್ರಗಳ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಸಾಮರ್ಥ್ಯವನ್ನು ಉತ್ತೇಜಿಸುವ ದಿಸೆಯಲ್ಲಿ ಸಮಗ್ರ ಯೋಜನೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa