
ನವದೆಹಲಿ, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಳಿಸಿದೆ ಎಂದು ಬಿಜೆಪಿ ಹೇಳಿದೆ.
ದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರೀವೇದಿ ಮಾತನಾಡಿ, ಇದು ತಾಂತ್ರಿಕ ಕಾರಣಗಳಿಂದಾದ ಖುಲಾಸೆ ಎಂದು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ನಾಶಪಡಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ.
ಸಂಸದ ಮನೋಜ ತಿವಾರಿ ಮಾತನಾಡಿ, ಸಾಕ್ಷ್ಯಾಧಾರಗಳನ್ನು ನಾಶಮಾಡಲು 173 ಮೊಬೈಲ್ ಫೋನ್ಗಳನ್ನು ಧ್ವಂಸ ಮಾಡಲಾಗಿದೆ ಎಂಬ ವಿಷಯ ಎಲ್ಲರಿಗೂ ತಿಳಿದಿದೆ ಎಂದು ಆರೋಪಿಸಿದರು. ಸಾಕ್ಷ್ಯಗಳನ್ನು ನಾಶಮಾಡುವ ಮೂಲಕ ಕಾನೂನನ್ನು ದೀರ್ಘಕಾಲ ಗೊಂದಲಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ದೆಹಲಿಯ ಜನತೆ ಎಎಪಿ ನಾಯಕರ ವಿರುದ್ಧ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅವರನ್ನು ಅಧಿಕಾರದಿಂದ ದೂರ ಮಾಡಿದ್ದಾರೆ ಎಂದು ತಿವಾರಿ ಅಭಿಪ್ರಾಯಪಟ್ಟರು.
ಇದೇ ವೇಳೆ, ಸಿಬಿಐ ಹೈಕೋರ್ಟ್ಗೆ ಮೊರೆ ಹೋಗುತ್ತಿರುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ. ಅಬಕಾರಿ ನೀತಿಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದಿದ್ದರೆ, ಅದನ್ನು ಹಿಂಪಡೆಯುವ ಅಗತ್ಯವೇನು ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳಿಗೆ ಸಹಿ ಹಾಕದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿತ್ತು ಎಂದು ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa