
ಗದಗ, 05 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿನ ಹಿತದೃಷ್ಟಿಯಿಂದ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಯಂಕಾಲ 7.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ಮೊಬೈಲ್ ಹಾಗೂ ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಮತ್ತು ಟ್ರ್ಯಾಕ್ಟರ್ಗಳಲ್ಲಿ ಜೋರಾಗಿ ಹಾಡು ಹಾಕಿಕೊಂಡು ಸಂಚರಿಸದಂತೆ ಡಂಗುರ ಸಾರಲು ತಾಲೂಕ ಪಂಚಾಯತ್ ರೋಣ ಆದೇಶ ಹೊರಡಿಸಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ರೋಣ ಇವರ ಪತ್ರದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ಓದಿಗೆ ಶಾಂತ ವಾತಾವರಣ ಒದಗಿಸಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಸುಧಾರಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.
ಈ ಕುರಿತು ರೋಣ ಹಾಗೂ ಗಜೇಂದ್ರಗಡ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಕ್ಷಣ ಡಂಗುರ ಸಾರಿಸಿ, ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
“ಇವತ್ತಿನ ಮಕ್ಕಳಿಗೆ ಓದಲು ಸಮಯ ಕೊಡುವುದು ತುಂಬಾ ಮುಖ್ಯ. ಸಂಜೆ ಹೊತ್ತಿಗೆ ಟಿವಿ, ಮೊಬೈಲ್, ಜೋರಾದ ಹಾಡುಗಳಿಂದ ಮಕ್ಕಳ ಗಮನ ಬೇರೆಡೆ ಹೋಗುತ್ತಿತ್ತು. ಸರ್ಕಾರ ಹಾಗೂ ತಾಲೂಕ ಪಂಚಾಯತ್ ತೆಗೆದುಕೊಂಡಿರುವ ಈ ನಿರ್ಧಾರ ಬಹಳ ಒಳ್ಳೆಯದು. ನಾವು ಗ್ರಾಮಸ್ಥರು ಎಲ್ಲರೂ ಸಹಕರಿಸುತ್ತೇವೆ ಎಂದು ಗ್ರಾಮಸ್ಥರಾದ ಶಿವಾನಂದ ತಿಳಿಸಿದ್ದಾರೆ.
“ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ನಮ್ಮೆಲ್ಲರ ಜವಾಬ್ದಾರಿ. ಮಕ್ಕಳ ಓದಿಗೆ ಅನುಕೂಲವಾಗುವ ಶಾಂತ ವಾತಾವರಣ ನಿರ್ಮಾಣವೇ ಈ ಕ್ರಮದ ಉದ್ದೇಶ. ಸಾರ್ವಜನಿಕರ ಸಹಕಾರದಿಂದ ಉತ್ತಮ ಫಲಿತಾಂಶ ಸಾಧಿಸಬಹುದು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್, ಟಿವಿ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಅಧ್ಯಯನಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕ ಪಂಚಾಯತ್ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / lalita MP