
ಬೆಂಗಳೂರು, 15 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಜಾರಿಯಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿರುವುದು ಬಹಿರಂಗವಾಗಿದೆ ಎಂದು ಭಾರತೀಯ ಜನತಾ ಪಕ್ಷ ರಾಜ್ಯ ಘಟಕ ಆರೋಪಿಸಿದೆ.
ಯೋಜನೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಜಾರಿಗೆ ತರಲಾದ ಮುಖಚರ್ಯೆ ಸಹಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಬಂದ ಒಂದೇ ವಾರದಲ್ಲಿ ದೊಡ್ಡ ಮಟ್ಟದ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಎಂದು ಬಿಜೆಪಿ ತಿಳಿಸಿದೆ. ಈ ವ್ಯವಸ್ಥೆಯ ಜಾರಿಯಿಂದ ರಾಜ್ಯದಾದ್ಯಂತ ಒಟ್ಟು 33,972 ನಕಲಿ ಕಾರ್ಮಿಕ ಕಾರ್ಡ್ಗಳು ಪತ್ತೆಯಾಗಿವೆ ಎಂದು ಹೇಳಿದೆ.
ಇದರಿಂದ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಬೇನಾಮಿ ಹಾಜರಾತಿ ಪ್ರಮಾಣ ಕಡಿಮೆಯಾಗಿದ್ದು, ಕೂಲಿ ಕಾರ್ಮಿಕರಿಗೆ ನೀಡಬೇಕಾದ ಹಣದಲ್ಲಿ ಶೇ. 80 ರಷ್ಟು ಮೊತ್ತ ಅನ್ಯರ ಪಾಲಾಗುತ್ತಿದ್ದದ್ದು ತಡೆಗಟ್ಟಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಗಾಂಧಿ ಹೆಸರಿನಲ್ಲೇ ಅಧಿಕಾರ ಅನುಭವಿಸಿರುವ ಕಾಂಗ್ರೆಸ್ ಪಕ್ಷವೇ ಈಗ ಗಾಂಧಿ ಹೆಸರಿನ ಯೋಜನೆಗಳಲ್ಲಿ ಲೂಟಿ ನಡೆಸುತ್ತಿದೆ ಎಂದು ಆರೋಪಿಸಿದೆ.
ತಮ್ಮ ಲೂಟಿಗೆ ವಿಬಿ-ಜಿ ರಾಮ್ ಜಿ ಯೋಜನೆ ಅಡ್ಡಿಯಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ಈ ಯೋಜನೆಗೆ ಸಂಬಂಧಿಸಿದ ಕಾಯ್ದೆಯ ಬಗ್ಗೆ ಸುಳ್ಳು ಅಪಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಗ್ರಾಮೀಣಾಭಿವೃದ್ಧಿಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ವಿಬಿ-ಜಿ ರಾಮ್ ಜಿ ವ್ಯವಸ್ಥೆ ಮಹತ್ವದ್ದಾಗಿದ್ದು, ಇದು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದರ ಜೊತೆಗೆ ಗ್ರಾಮೀಣ ಭಾರತದ ಆರ್ಥಿಕತೆಗೆ ಹೊಸ ಶಕ್ತಿ ನೀಡಲಿದೆ ಎಂದು ಬಿಜೆಪಿ ಹೇಳಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa