
ಚಾಮರಾಜನಗರ, 17 ಮಾರ್ಚ್ (ಹಿ.ಸ.):
ಆ್ಯಂಕರ್:
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಸಮೀಪ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕೇರಳ ಮೂಲದ ವ್ಯಕ್ತಿಯೊಬ್ಬರು ಕೃಷಿ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮೃತ ಹುಲಿಯ ದೇಹವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಥರ್ಮಲ್ ಡ್ರೋನ್ ಸಹಾಯದಿಂದ ಪತ್ತೆಹಚ್ಚಿದ್ದಾರೆ. ಈ ಭಾಗದಲ್ಲಿ ಹುಲಿ ಹಾಗೂ ಚಿರತೆಗಳ ಸಂಚಾರ ಹೆಚ್ಚಿರುವ ಹಿನ್ನೆಲೆಯಲ್ಲಿ ನಿಯಮಿತ ನಿಗಾವಹಣೆ ನಡೆಸಲಾಗುತ್ತಿತ್ತು. ಅದೇ ವೇಳೆ ಹುಲಿ ಸತ್ತು ಬಿದ್ದಿರುವುದು ಗಮನಕ್ಕೆ ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮೀನು ಗುತ್ತಿಗೆ ಪಡೆದಿದ್ದ ಕೇರಳ ಮೂಲದ ಪರಮೇಶ್ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮ ವಿದ್ಯುತ್ ತಂತಿ ಬಳಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ. ಇದೇ ವೇಳೆ, ಕಾಡುಪ್ರಾಣಿಗಳ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa