ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರ್ಕಾರ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿ
Hebbalkar


ಬೆಂಗಳೂರು, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು.

ಬಜೆಟ್ ಅಧಿವೇಶನದ ಬುಧವಾರ ಪ್ರಶೋತ್ತರ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ರಾಜ್ಯ ಅತಿ ಹೆಚ್ಚು ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡುತ್ತಿದೆ. ಹೆಚ್ಚು ಗೌರವ ಧನ ಕೊಡುತ್ತಿರುವವರ ಪೈಕಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತದೆ. ಹರಿಯಾಣ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ಬಳಿಕ ಹೆಚ್ಚು ಗೌರವ ಧನ ಕೊಡಲಾಗುತ್ತಿದೆ ಎಂದರು.

ಅಂಗನವಾಡಿ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ 2700 ರೂಪಾಯಿ ಗೌರವ ಧನವನ್ನು ಪಾವತಿಸಿದರೆ, ಉಳಿದ 9800 ರೂಪಾಯಿಯನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1000 ರೂಪಾಯಿ, ಸಹಾಯಕಿಯರಿಗೆ 750 ರೂಪಾಯಿ ಏರಿಕೆ ಮಾಡಲಾಯಿತು. ಅವರು ಮಾಡುತ್ತಿರುವ ಕೆಲಸಕ್ಕೆ ಇದು ಸಾಕಾಗುತ್ತಿಲ್ಲ, ಸಹಾಯಧನ ಏರಿಕೆ ಮಾಡಬೇಕು ಎಂದು ಮನವಿ ಬಂದಿದ್ದು, ಈ ಸಂಬಂಧ ನಾವು ಈಗಾಗಲೇ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವಿಷಯದಲ್ಲಿ ಕೇಂದ್ರ ಸರಕಾರ ಒಂದು ಹೆಜ್ಜೆ ಮುಂದೆ ಹೋದರೆ ನಾವೂ ಒಂದು ಹೆಜ್ಜೆ ಮುಂದೆ ಹೋಗುತ್ತೇವೆ. ಅವರೂ ಕಣ್ತೆರೆಯಬೇಕು ಎಂದು ಸಚಿವರು ಹೇಳಿದರು.

ಪ್ರಸಕ್ತ ವರ್ಷದಿಂದ 5,000 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಪೌಷ್ಟಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ. ಬಿಎ.ಬಿಎಡ್, ಎಂಎ, ಎಂಕಾಂ ಪದವಿ ಪಡೆದಿರುವ ಸುಮಾರು 17,000 ಅಂಗನವಾಡಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ, ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಗುಣಮಟ್ಟ ಕಾಯ್ದುಕೊಳುವುದು ನಮ್ಮ ಉದ್ದೇಶ ಎಂದು ಸಚಿವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande