
ಬೆಂಗಳೂರು, 25 ಮಾರ್ಚ್ (ಹಿ.ಸ.):
ಆ್ಯಂಕರ್:
ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರ ಮಂಡಿಸಿದ ಬಜೆಟ್ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗೆ ದಾರಿದೀಪವಾಗಿದೆ ಎಂದು ಹೇಳಿದರು.
ಈ ಬಾರಿ ಬಜೆಟ್ ಚರ್ಚೆಯಲ್ಲಿ ಒಟ್ಟು 50 ಮಂದಿ ಸದಸ್ಯರು ಭಾಗವಹಿಸಿದ್ದು, 24 ಗಂಟೆ 45 ನಿಮಿಷಗಳ ಕಾಲ ಚರ್ಚೆ ನಡೆದಿದೆ. ತಾವು ಮಂಡಿಸಿದ 17 ಬಜೆಟ್ಗಳ ಪೈಕಿ ಇಷ್ಟೊಂದು ವ್ಯಾಪಕ ಚರ್ಚೆ ಇದೇ ಮೊದಲು ಎಂದು ಸಿಎಂ ಹೇಳಿದರು. ಚರ್ಚೆಯಲ್ಲಿ ಭಾಗವಹಿಸಿ ಟೀಕೆ-ವಿಮರ್ಶೆ ಮಾಡಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಪ್ರತಿ ಪಕ್ಷದವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, “ಸೋಷಿಯಲ್ ಮೀಡಿಯಾಕ್ಕೆ ಪದಪ್ರಯೋಗಗಳ ಮೂಲಕ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಆದರೆ ಆಯವ್ಯಯದ ಆಳವಾದ ಅಧ್ಯಯನ ಇಲ್ಲದೆ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ಟೀಕಿಸಿದರು.
“ಬಜೆಟ್ ಖಾಲಿ ಚೊಂಬು ಎಂದು ಹೇಳುವುದು ಸರಿಯಲ್ಲ. ಕರ್ನಾಟಕಕ್ಕೆ ಖಾಲಿ ಚೊಂಬು ಅಲ್ಲ, ತುಂಬಿದ ಚೊಂಬನ್ನೇ ನೀಡಲಾಗಿದೆ. ನಮ್ಮ ಬಜೆಟ್ ತುಂಬಿದ ಕೊಡ” ಎಂದು ಸಿಎಂ ಹೇಳಿದರು.
ಪ್ರಮುಖ ದಿನಪತ್ರಿಕೆಗಳ ಸಂಪಾದಕೀಯಗಳು ಮತ್ತು ಆರ್ಥಿಕ ತಜ್ಞರಿಂದ ಬಜೆಟ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ ಎಂದು ಅವರು ತಿಳಿಸಿದರು. ಎಲ್ಲ ಸಮುದಾಯಗಳನ್ನು ಒಳಗೊಂಡ, ಸುಸ್ಥಿರತೆ, ಮೂಲಸೌಕರ್ಯ, ನೀರಾವರಿ, ಉದ್ಯೋಗ ಸೃಷ್ಟಿ, ಸಾಮಾಜಿಕ ಭದ್ರತೆ, ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿದ ಬಜೆಟ್ ಎಂದು ವಿಶ್ಲೇಷಿಸಲಾಗಿದೆ ಎಂದರು. ಹೂಡಿಕೆ ಹಾಗೂ ನವೋದ್ಯಮಗಳಿಗೆ ಉತ್ತೇಜನ ನೀಡುವ ದಿಕ್ಕಿನಲ್ಲಿ ಬಜೆಟ್ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa