
ಮೈಸೂರು, 27 ಮಾರ್ಚ್ (ಹಿ.ಸ.):
ಆ್ಯಂಕರ್:ಮೈಸೂರು ಜಿಲ್ಲೆಯ ನಾಗರಹೊಳೆ ಹುಲಿ ಮೀಸಲು ಅರಣ್ಯ ವ್ಯಾಪ್ತಿಯ ಮೆಟ್ಟಿಕುಪ್ಪೆ ಶ್ರೇಣಿಯ ಸಮೀಪ ಬಲೆಗೆ ಸಿಲುಕಿ ಮೂರು ವರ್ಷದ ಗಂಡು ಹುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅರಣ್ಯದ ಗಡಿಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಆಸನಗುಂಡಿ ಗ್ರಾಮದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಕಾಡು ಹಂದಿಗಳನ್ನು ಹಿಡಿಯಲು ಅಕ್ರಮವಾಗಿ ಹಾಕಲಾಗಿದ್ದ ಬಲೆಗೆ ಹುಲಿ ಸಿಲುಕಿಕೊಂಡು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕಿ ಸೀಮಾ ಅವರ ಮಾಹಿತಿಯ ಪ್ರಕಾರ, ಘಟನೆ ನಡೆದ ಜಮೀನು ಗಿರೀಶ್ ಎಂಬವರ ಸ್ವತ್ತಾಗಿದ್ದು, ಕೃಷಿ ಕಾರ್ಮಿಕರು ಕಾಡು ಹಂದಿ ಬೇಟೆಗೆ ಈ ಬಲೆಯನ್ನು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ಸಾವಿನ ನಿಖರ ಕಾರಣ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಅಕ್ರಮ ಬೇಟೆ ಚಟುವಟಿಕೆ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa