
ನವದೆಹಲಿ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇಂದು ಲೋಕ ಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಸಂಬಂಧಿತ ಮಸೂದೆಗಳನ್ನು ವಿರೋಧ ಪಕ್ಷಗಳು ಪ್ರಶ್ನಿಸಿವೆ.
ವಿಶೇಷ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಅರ್ಜುನ್ ರಾಮ್ ಮೇಘವಾಲ್ ಅವರು ಸಂವಿಧಾನ (131ನೇ ತಿದ್ದುಪಡಿ) ಮಸೂದೆ–2026 ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ–2026 ಅನ್ನು ಲೋಕ ಸಭೆಯಲ್ಲಿ ಮಂಡಿಸಲು ಪ್ರಸ್ತಾಪಿಸಿದರು.
ಇದೇ ವೇಳೆ, ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ–2026 ಅನ್ನು ಮಂಡಿಸಲು ಪ್ರಸ್ತಾಪಿಸಿದರು. ಈ ಮಸೂದೆಗಳು ದೇಶದ ಚುನಾವಣಾ ವ್ಯವಸ್ಥೆ, ಮಹಿಳಾ ಮೀಸಲಾತಿ ಹಾಗೂ ಆಡಳಿತಾತ್ಮಕ ಬದಲಾವಣೆಗಳಿಗೆ ಸಂಬಂಧಿಸಿದವು ಎಂದು ಸರ್ಕಾರ ತಿಳಿಸಿದೆ.
ಕಾಂಗ್ರೆಸ್ ಪರವಾಗಿ ಮಾತನಾಡಿದ ಕೆ.ಸಿ.ವೇಣುಗೋಪಾಲ ಅವರು ಈ ಮೂರು ಮಸೂದೆಗಳನ್ನು ಸದನದಲ್ಲಿ ಮಂಡಿಸುವುದನ್ನೇ ವಿರೋಧಿಸಿದರು. ಸಂವಿಧಾನ ತಿದ್ದುಪಡಿ, ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳು ದೇಶದ ಸಮತೋಲನ ಹಾಳುಮಾಡುವ ಸಾಧ್ಯತೆ ಇದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, ಮಸೂದೆಗಳ ಮೂಲಭೂತ ಅಂಶಗಳ ಬಗ್ಗೆ ವೇಣುಗೋಪಾಲ್ ಮಾತನಾಡಲು ಸಾಧ್ಯವಿಲ್ಲ, ಅವರು ತಾಂತ್ರಿಕ ಆಕ್ಷೇಪಣೆಗಳನ್ನು ಮಾತ್ರ ಎತ್ತಬಹುದು ಎಂದು ಹೇಳಿದರು. ಚರ್ಚೆಯ ವೇಳೆ ಸರ್ಕಾರವು ಪ್ರತಿಪಕ್ಷಗಳಿಗೆ ಬಲವಾದ ಉತ್ತರ ನೀಡಲಿದೆ ಎಂದು ಅವರು ತಿಳಿಸಿದರು.
ಇನ್ನೊಂದೆಡೆ, ಸಮಾಜವಾದಿ ಪಕ್ಷ ಕೂಡ ಈ ಮೂರು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಪರವಾಗಿ ಮಾತನಾಡಿದ ಧರ್ಮೇಂದ್ರ ಯಾದವ, ತಮ್ಮ ಪಕ್ಷವು ಸಂವಿಧಾನ ತಿದ್ದುಪಡಿ, ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳನ್ನು ವಿರೋಧಿಸುತ್ತದೆ ಎಂದು ಹೇಳಿದರು.
ಆದರೆ ಮಹಿಳಾ ಮೀಸಲಾತಿ ವಿಷಯದಲ್ಲಿ ಪಕ್ಷ ಸ್ಪಷ್ಟ ಬೆಂಬಲ ಹೊಂದಿದ್ದು, ಮಹಿಳೆಯರಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa