
ಚಿತ್ರದುರ್ಗ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಇದೇ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
ಚಿತ್ರದುರ್ಗ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 6640 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅತ್ಯಂತ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿರಬೇಕು. ವಿಶೇಷವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನೆಲಮಹಡಿಯಲ್ಲೇ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಪ್ರಸ್ತುತ ಬಿಸಿಲಿನ ತಾಪ ಹೆಚ್ಚಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ನೆರಳಿನ ವ್ಯವಸ್ಥೆ ಹಾಗೂ ಅಗತ್ಯವಿದ್ದರೆ ಶಾಮಿಯಾನಗಳನ್ನು ಹಾಕಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಕೆಇಎ ನಿಯಮದಂತೆ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುವುದು. ಪ್ರತಿ ಕಾಲೇಜಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಅವರು ಪರೀಕ್ಷಾ ಪ್ರಕ್ರಿಯೆಯನ್ನು ಹತ್ತಿರದಿಂದ ಗಮನಿಸಲಿದ್ದಾರೆ. ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ಹಾಗೂ ಸಂಗ್ರಹಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಏಪ್ರಿಲ್ 23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕೆಂದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವಾರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದ ಸುತ್ತಲು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa