ವೇದಾಂತ ಸ್ಥಾವರ ದುರಂತ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಛತ್ತೀಸ್ಗಢದ ಲ್ಲಿ
Power plant


ಷಷ್ಠೀ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಷಷ್ಠೀ ಜಿಲ್ಲೆಯಲ್ಲಿ ಸಂಭವಿಸಿದ ವೇದಾಂತ ವಿದ್ಯುತ್ ಸ್ಥಾವರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಏಪ್ರಿಲ್ 14ರಂದು ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಅನೇಕ ಕಾರ್ಮಿಕರು ಸುಟ್ಟು ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಜಾರ್ಖಂಡ್ ಮೂಲದ ಮನೀಶ್ ಕುಮಾರ್ ಅವರು ರಾಯಗಢದ ಲಖಿರಾಮ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಫುಲ್ಲ ಠಾಕೂರ್ ತಿಳಿಸಿದ್ದಾರೆ.

ಈ ಸಾವಿನೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ತಲುಪಿದೆ. ಇನ್ನೂ 12ಕ್ಕೂ ಹೆಚ್ಚು ಕಾರ್ಮಿಕರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ನಂತರ ಆಡಳಿತ ಮತ್ತು ತನಿಖಾ ಸಂಸ್ಥೆಗಳು ನಿರಂತರವಾಗಿ ತನಿಖೆ ನಡೆಸುತ್ತಿವೆ. ಪ್ರಾಥಮಿಕ ತನಿಖೆಯಲ್ಲಿ ಸ್ಥಾವರದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಅನಿಲ್ ಅಗರ್ವಾಲ್ ಸೇರಿದಂತೆ 10 ಜನರ ವಿರುದ್ಧ ದಾಭ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಕ್ರಮವನ್ನು ಪ್ರಮುಖ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಪ್ರಶ್ನಿಸಿದ್ದು, ಸಮಗ್ರ ತನಿಖೆಯಿಲ್ಲದೆ ದೊಡ್ಡ ಕೈಗಾರಿಕೋದ್ಯಮಿಗಳ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೊದಲು ನ್ಯಾಯಯುತ ತನಿಖೆ ನಡೆಯಬೇಕು ಹಾಗೂ ದೃಢವಾದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮಾತ್ರ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅವರು ಹೇಳಿದ್ದಾರೆ.

ಅಪಘಾತದ ತನಿಖೆಯಲ್ಲಿ ಸ್ಥಾವರದ ಕಾರ್ಯಾಚರಣೆ ಮತ್ತು ನಿರ್ವಹಣೆಯ ಹೊಣೆ ಹೊತ್ತಿರುವ ಎನ್.ಜಿ.ಎಸ್.ಎಲ್. ಸಂಸ್ಥೆಯ ಪಾತ್ರವೂ ಪ್ರಮುಖವಾಗಿದೆ. ಈ ಸಂಸ್ಥೆಯಲ್ಲಿ ಎನ್ಟಿಪಿಸಿ ಮತ್ತು ಜಿಇ ಪವರ್ ಇಂಡಿಯಾ ಲಿಮಿಟೆಡ್ ತಲಾ 50 ಪ್ರತಿಶತದಷ್ಟು ಪಾಲು ಹೊಂದಿವೆ ಎಂದು ತಿಳಿದುಬಂದಿದೆ.

ಅಪಘಾತದ ಹಿಂದೆ ತಾಂತ್ರಿಕ ದೋಷವಿದೆಯೇ ಅಥವಾ ಮಾನವ ನಿರ್ಲಕ್ಷ್ಯವಿದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಪ್ರಯತ್ನಿಸುತ್ತಿವೆ. ದುರಂತದ ನಂತರ ಇಡೀ ಪ್ರದೇಶದಲ್ಲಿ ಶೋಕ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸಲು ಆಡಳಿತ ನಿರಂತರ ಮೇಲ್ವಿಚಾರಣೆ ನಡೆಸುತ್ತಿದೆ.

ರಾಜ್ಯ ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande