

ಬಾಗಲಕೋಟೆ, 03 ಏಪ್ರಿಲ್ (ಹಿ.ಸ) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಐಹೋಳೆಯಲ್ಲಿ ನಡೆಯುತ್ತಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರ ಭಾಷಣ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬೈಕ್ನಲ್ಲಿ ಬಂದು ಅಡ್ಡಿಪಡಿಸಿದರು ಎಂಬ ಆರೋಪ ಕೇಳಿ ಬಂದಿದೆ.
ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಕಾಂಗ್ರೆಸ್ ಧ್ವಜ ಹಿಡಿದು ಕೆಲ ಯುವಕರು ಬೈಕ್ಗಳಲ್ಲಿ ಆಗಮಿಸಿ ಸದ್ದು ಮಾಡುತ್ತ ಗದ್ದಲ ಸೃಷ್ಟಿಸಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಈ ಘಟನೆಗೆ ಸಂಬಂಧಿಸಿ ಮಾಜಿ ಸಚಿವ ಮುರಗೇಶ್ನಿರಾಣಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಕಾಂಗ್ರೆಸ್ಸಿನ ಸಂಸ್ಕೃತಿ” ಎಂದು ವಾಗ್ದಾಳಿ ನಡೆಸಿದರು. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇಂತಹ ನಡೆ ಸರಿಯಲ್ಲ ಎಂದು ಹೇಳಿದ ಕೇಂದ್ರ ಸಚಿವ ಸೋಮಣ್ಣ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಫೋನ್ ಮೂಲಕ ಅಸಮಾಧಾನ ವ್ಯಕ್ತಪಡಿಸಿ ಪರಿಸ್ಥಿತಿ ಬಗ್ಗೆ ಗಮನ ಹರಿಸಲು ಸೂಚಿಸಿದರು.
ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಐಹೊಳೆಯ ಪ್ರಚಾರ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ಶಾಂತಗೊಂಡಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande