


ಕೊಪ್ಪಳ, 08 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಹಾಗೂ ಶ್ರೀ ಶಂಕರ ಸೇವಾ ಸಮಿತಿ ಕೋಟೆ(ರಿ) ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 21 ರಂದು ಆಚರಿಸಲಾಗುವ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರದಂದು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏ.21 ರಂದು ಸಂಜೆ 4 ಗಂಟೆಗೆ ಶ್ರೀ ಶಂಕರ ಸಾಂಸ್ಕೃತಿಕ ಭವನದಿಂದ ಶ್ರೀ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ನಗರದ ಗಡಿಯಾರ ಕಂಬ, ಟಾಂಗಾ ಕೂಟ, ವಾರಕರ ಓಣಿ ಮಾರ್ಗವಾಗಿ ಸಂಚರಿಸಿ ಶ್ರೀ ಶಂಕರ ಸಾಂಸ್ಕೃತಿಕ ಭವನವನ್ನು ತಲುಪುತ್ತದೆ. ಸಂಜೆ 6 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀ ಶಂಕರ ಸಾಂಸ್ಕೃತಿಕ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸಿದ್ದತೆಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಮಾಜದ ಬಾಂಧವರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜದ ಬಾಂಧವರು ಕೂಡ ಶಿಷ್ಠಾಚಾರದ ಉಲ್ಲಂಘನೆಯಾಗದಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಆಹಾರ ಇಲಾಖೆಯ ಉಪನಿರ್ದೇಶಕರಾದ ವಿಶ್ವನಾಥಗೌಡ ಎಂ.ಎನ್., ಡಿಸಿಎಫ್ ಕಚೇರಿಯ ಮಲ್ಲಿಕಾರ್ಜುನ ಗೌಡರ್, ಎಎಸ್ಐ ವೀರಭದ್ರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಸಮಾಜದ ಮುಖಂಡರಾದ ಡಿ.ವಿ.ಜೋಶಿ, ರಮೇಶ ಪದಕಿ, ಅಶೋಕ ಪದಕಿ, ರವಿ ಪುರೋಹಿತ, ಬಾಳಂಭಟ್ ಜೋಶಿ, ವಿನಾಯಕ ಜೋಶಿ, ಸೇರಿದಂತೆ ಸಮಾಜದ ಇತರೆ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್