
ವಿಜಯಪುರ, 01 ಮೇ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ದೇವಣಗಾಂವ ಗ್ರಾಮದ ಜನರ ದಶಕಗಳ ಕನಸಾಗಿದ್ದ ಸೇತುವೆ ನವೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದ್ದು, ಈಗ ಕಾಮಗಾರಿ ಭರದಿಂದ ಸಾಗುತ್ತಿದೆ. ರಾಜ್ಯ ಸರ್ಕಾರದಿಂದ ₹3.50 ಕೋಟಿ ವೆಚ್ಚದಲ್ಲಿ ಈ ಮಹತ್ವದ ಯೋಜನೆ ಮಂಜೂರಾಗಿದ್ದು, ಗ್ರಾಮಸ್ಥರಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ.
ದೇವಣಗಾಂವ ಭಾಗದ ಜನರು ಹಲವು ವರ್ಷಗಳಿಂದ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಸೇತುವೆ ನಿರ್ಮಾಣದ ಅಗತ್ಯವಿದೆ ಎಂದು ಆಗ್ರಹಿಸುತ್ತಿದ್ದರು. ಹಳೆಯ ಸೇತುವೆ ಜೀರ್ಣಾವಸ್ಥೆಗೆ ತಲುಪಿದ್ದರಿಂದ ಮಳೆಗಾಲದಲ್ಲಿ ಸಂಚಾರ ಅಸಾಧ್ಯವಾಗುತ್ತಿತ್ತು.
ಇದೀಗ ಹೊಸ ಸೇತುವೆ ನಿರ್ಮಾಣದಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಸೇತುವೆ ಕಾಮಗಾರಿ ವೇಗವಾಗಿ ಮುಂದುವರಿಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಸೇತುವೆ ನಿರ್ಮಾಣದಿಂದ ದೇವಣಗಾಂವ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ಸೌಲಭ್ಯ ಒದಗಲಿದೆ.
ಜೊತೆಗೆ ಕೃಷಿ ಉತ್ಪನ್ನಗಳ ಸಾಗಾಣಿಕೆ, ವಿದ್ಯಾರ್ಥಿಗಳ ಓಡಾಟ ಹಾಗೂ ತುರ್ತು ಸೇವೆಗಳಿಗೂ ಸಹ ಹೆಚ್ಚಿನ ಅನುಕೂಲವಾಗಲಿದೆ.
ಸ್ಥಳೀಯರು ಸರ್ಕಾರದ ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ತಮ್ಮ ಬಹುಕಾಲದ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಿದ್ದು, ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ನೀಡಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಪ್ರಕಟಣೆ ಮೂಲಕ ತಿಳಿಸಿದರು
ಹಿಂದೂಸ್ತಾನ್ ಸಮಾಚಾರ್ / jyothi deshpande