
ಬಾಗಲಕೋಟೆ, 01 ಮೇ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ತೀವ್ರ ಸಮಸ್ಯೆಗೆ ಕೊನೆಗೂ ತಾತ್ಕಾಲಿಕ ಪರಿಹಾರ ದೊರೆತಿದೆ. ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಈ ಭಾಗದ ಜನರು ಮತ್ತು ಜಾನುವಾರುಗಳಿಗೆ ನಿಟ್ಟುಸಿರು ಸಿಕ್ಕಿದೆ.
ಶಿರಗುಪ್ಪಿ, ಮೈಗೂರ, ಕಂಕಣವಾಡಿ ಸೇರಿದಂತೆ ಸುಮಾರು ಹತ್ತುಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ನೀರಿನ ಕೊರತೆಯಿಂದ ದಿನನಿತ್ಯದ ಬದುಕು ದುಸ್ತರವಾಗಿದ್ದು, ಜಾನುವಾರುಗಳಿಗೂ ನೀರಿನ ಅಭಾವ ಕಾಡುತ್ತಿತ್ತು.
ಈ ಸಮಸ್ಯೆ ಕುರಿತು ಸ್ಥಳೀಯ ರೈತ ಸಂಘಟನೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಂಡಿದ್ದಾರೆ. ಹಿಪ್ಪರಗಿ ಡ್ಯಾಂನಿಂದ ಸುಮಾರು 0.10 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದ್ದು, ಈ ನೀರನ್ನು ಮುಖ್ಯವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಮೀಸಲಿಡಲಾಗಿದೆ.
ನದಿ ಪಾತ್ರದ ಗ್ರಾಮಗಳಲ್ಲಿ ಈಗ ನೀರಿನ ಲಭ್ಯತೆ ಹೆಚ್ಚಾಗಿದ್ದು, ಜನರಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಿಸಿದೆ. ಆದಾಗ್ಯೂ, ಕೃಷಿ ಚಟುವಟಿಕೆಗಳಿಗೆ ಸಹಾಯಕವಾಗುವಂತೆ ಇನ್ನಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ದಿಕ್ಕಿನಲ್ಲಿ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ಸೂಕ್ತ ಯೋಜನೆ ರೂಪಿಸಬೇಕು ಎಂಬ ಒತ್ತಾಯವೂ ಕೇಳಿ ಬರುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande