
ನವದೆಹಲಿ, 15 ಮೇ (ಹಿ.ಸ.) :
ಆ್ಯಂಕರ್ : ಭಾರತ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು ಶುಕ್ರವಾರ ದೆಹಲಿಯಲ್ಲಿ ವಿಸ್ತೃತ ಮಾತುಕತೆ ನಡೆಸಿದರು. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಇತ್ತೀಚಿನ ಪರಿಸ್ಥಿತಿ ಮತ್ತು ಅದರ ಜಾಗತಿಕ ಪರಿಣಾಮಗಳ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರೆಂದು ತಿಳಿದು ಬಂದಿದೆ.
ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಎರಡು ದಿನಗಳ ಸಭೆಯ ನಡುವೆಯೇ ಈ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಯಿತು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಾ. ಜೈಶಂಕರ್, “ಇಂದು ಬೆಳಿಗ್ಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರೊಂದಿಗೆ ವಿವರವಾದ ಸಂಭಾಷಣೆ ನಡೆಸಲಾಯಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿ ಹಾಗೂ ಅದರ ಪರಿಣಾಮಗಳ ಕುರಿತು ಚರ್ಚೆ ನಡೆಯಿತು. ಪರಸ್ಪರ ಆಸಕ್ತಿಯ ದ್ವಿಪಕ್ಷೀಯ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು” ಎಂದು ತಿಳಿಸಿದ್ದಾರೆ.
ಮೇ 14 ಮತ್ತು 15ರಂದು ದೆಹಲಿಯ ಭಾರತ್ ಮಂಟಪ ನಲ್ಲಿ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಡೆಯುತ್ತಿದೆ. ಈ ಸಭೆಯ ಅಧ್ಯಕ್ಷತೆಯನ್ನು ಡಾ. ಜೈಶಂಕರ್ ವಹಿಸಿಕೊಂಡಿದ್ದಾರೆ.
ಈ ವರ್ಷದ ಬ್ರಿಕ್ಸ್ ಸಭೆಯ ಧ್ಯೇಯವಾಕ್ಯ “ಸ್ಥಿತಿಸ್ಥಾಪಕತ್ವ, ನಾವೀನ್ಯತೆ, ಸಹಯೋಗ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ನಿರ್ಮಾಣ” ಎಂದು ನಿಗದಿಪಡಿಸಲಾಗಿದೆ.
ಭಾರತ ಮತ್ತು ಇರಾನ್ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳ ಕುರಿತು ಸಮನ್ವಯ ಸಾಧಿಸುವ ದೃಷ್ಟಿಯಿಂದ ಈ ಮಾತುಕತೆ ಮಹತ್ವ ಪಡೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.