
ನವದೆಹಲಿ, 15 ಮೇ (ಹಿ.ಸ.) :
ಆ್ಯಂಕರ್ : ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದ ಜಾಮೀನು ಅರ್ಜಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಅದುವರೆಗೂ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ಮುಂದಿನ ವರ್ಷದ ಮೇ 15ರವರೆಗೆ ದರ್ಶನ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನ್ಯಾ. ಪರ್ದಿವಾಲಾ ಹಾಗೂ ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಶುಕ್ರವಾರ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, “ದರ್ಶನ್ ಅವರನ್ನು ಜೈಲಿನ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಇತರ ಕೈದಿಗಳೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಕೂಡ ತಡೆಗೋಡೆಯ ಮೂಲಕ ಮಾತ್ರ ಭೇಟಿಯಾಗಲು ಅವಕಾಶ ಇದೆ. ಅವರು ಈಗಾಗಲೇ 9 ತಿಂಗಳಿಂದ ಜೈಲಿನಲ್ಲಿದ್ದಾರೆ” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ವಿಶೇಷ ಸೌಲಭ್ಯ ಸಿಗಬಾರದು ಎಂಬ ಕಾರಣಕ್ಕೆ ಅಲ್ಲಿ ಇರಿಸಿರಬಹುದು. ಆದರೆ ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಬೇಕು” ಎಂದು ಸೂಚಿಸಿತು.
ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಇದುವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ವಿಚಾರಣೆಯ ನಿಧಾನಗತಿಗೆ ಪ್ರಶ್ನೆ ಎತ್ತಿತು.
ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ ವಾದ ಮಂಡಿಸಿ, “17 ಆರೋಪಿಗಳ ಪರ ವಕೀಲರು ಪ್ರತಿ ಸಾಕ್ಷಿಯನ್ನೂ 5ರಿಂದ 6 ದಿನಗಳ ಕಾಲ ಪ್ರತಿಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ವಿಚಾರಣೆ ವಿಳಂಬವಾಗುತ್ತಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಇನ್ನೂ 172ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಾಕಿ ಇರುವಾಗ ತಕ್ಷಣ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೊಹಟಗಿ ಮಂಡಿಸಿದ ವಾದ ಹಾಗೂ ಸರ್ಕಾರದ ಪರ ವಾದಗಳನ್ನು ಆಲಿಸಿದ ಬಳಿಕ, “ಸದ್ಯಕ್ಕೆ ಅರ್ಹತೆ ಆಧಾರದ ಮೇಲೆ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.