
ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಇಂಧನ ಬೆಲೆ ಏರಿಕೆ ಮತ್ತು ತೆರಿಗೆ ಸಂಗ್ರಹದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, “ಬಿಜೆಪಿ ಸರ್ಕಾರದ ತೆರಿಗೆ ನೀತಿ ಜನವಿರೋಧಿ. ದೇಶದ ಹಣಕಾಸು ವ್ಯವಸ್ಥೆಯ ಮೇಲೆ ಭಾರೀ ಒತ್ತಡ ಹೇರಲಾಗಿದೆ. ಸಾಮಾನ್ಯ ಜನರು, ವ್ಯಾಪಾರಿಗಳು ಹಾಗೂ ಕಾರ್ಮಿಕರು ದಿನೇದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದು ಹೇಳಿದರು.
ಇಂಧನ ದರಗಳಲ್ಲಿ ನಿರಂತರ ಏರಿಕೆ ನಡೆಯುತ್ತಿರುವುದನ್ನು ಅವರು ತೀವ್ರವಾಗಿ ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ದೇಶದಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ಬೆಲೆ ಏರಿಕೆ ನಡೆಯುತ್ತಿದೆ ಎಂದು ಆರೋಪಿಸಿದರು. “ಅಚ್ಛೇ ದಿನಗಳ ಭರವಸೆ ನೀಡಿದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗೃಹೋಪಯೋಗಿ ಅನಿಲ ದರಗಳು ನಿರಂತರವಾಗಿ ಏರುತ್ತಿವೆ. ಮಧ್ಯಮ ವರ್ಗದ ಬದುಕು ದುಬಾರಿಯಾಗಿದೆ” ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಉಲ್ಲೇಖಿಸಿ, “ನಾವು ಗ್ಯಾರಂಟಿ ನೀಡಿಲ್ಲ ಅಂದಿದ್ದರೆ ಜನರ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿತ್ತು” ಎಂದು ಹೇಳಿದರು.
ಜೊತೆಗೆ ಕೇಂದ್ರ ಸರ್ಕಾರದ ತೆರಿಗೆ ನೀತಿಯನ್ನು ಟೀಕಿಸಿದ ಅವರು, “ತೆರಿಗೆ ಕಡಿಮೆ ಮಾಡಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲೆಯೇ ಇದೆ” ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ನಾಯಕರು ಮೇ 30 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಘೋಷಿಸಿದರು. ಬೆಲೆ ಏರಿಕೆ ಹಾಗೂ ತೆರಿಗೆ ನೀತಿ ವಿರುದ್ಧ ಜನರ ಪರವಾಗಿ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.