
ಬೆಂಗಳೂರು, 03 ಮೇ (ಹಿ.ಸ.) :
ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಉಂಟಾಗುವ ನಿರೀಕ್ಷೆಯಿದೆ.
ರಾಜ್ಯದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 4ರಿಂದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ ಭಾಗಗಳಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಲಾಗಿದೆ.
ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ತೆರೆದ ಪ್ರದೇಶಗಳಿಂದ ದೂರವಿರಲು ಹಾಗೂ ಮರಗಳ ಕೆಳಗೆ ನಿಲ್ಲದಿರಲು ನಾಗರಿಕರಿಗೆ ಸೂಚಿಸಲಾಗಿದೆ. ವಿದ್ಯುತ್ ಕಂಬಗಳು ಹಾಗೂ ಅಪಾಯಕಾರಿ ಸ್ಥಳಗಳಿಂದ ದೂರ ಉಳಿಯುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹವಾಮಾನ ಪರಿಸ್ಥಿತಿ ದಿನದಿಂದ ದಿನಕ್ಕೆ ಬದಲಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಹವಾಮಾನ ಇಲಾಖೆಯ ನವೀಕೃತ ಮಾಹಿತಿಯನ್ನು ಗಮನಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa