
ಮೈಸೂರು, 06 ಮೇ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ಪ್ರತಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.
ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa