
ಬಳ್ಳಾರಿ, 07 ಮೇ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15 ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇ 15 ರಂದು ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 02.30 ಗಂಟೆಗೆ ಜಿಪಿಎಫ್ ಅದಾಲತ್ ಒಳಗೊಂಡು ಎರಡು ಪ್ರತ್ಯೇಕ ಅವಧಿಗಳಲ್ಲಿ ಈ ಅದಾಲತ್ ಆಯೋಜಿಸಲಾಗಿದೆ.
ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯ ನಿವೃತ್ತಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಸಂಬ0ಧಿಸಿದ ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಅಪರ ನಿರ್ದೇಶಕರು ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ.
ಪಿಂಚಣಿ ಪಾವತಿಗೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ ನ ಈ ಸುವರ್ಣಾವಕಾಶ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್