
ಚಿತ್ರದುರ್ಗ, 13 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ.
ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪದವಿ ಮತ್ತು ಬಿ.ಇಡಿ ಅಂಕಪಟ್ಟಿಗಳು, ಟಿ.ಇ.ಟಿ ಪ್ರಮಾಣಪತ್ರ ಹಾಗೂ ಸೇವಾ ಪ್ರಮಾಣಪತ್ರಗಳ ಮೂಲ ಪ್ರತಿಗಳೊಂದಿಗೆ 2026ರ ಜೂನ್ 15ರ ಸೋಮವಾರ ಬೆಳಿಗ್ಗೆ 10.30ಕ್ಕೆ ಸಂಬಂಧಪಟ್ಟ ಶಾಲೆಗಳಿಗೆ ಹಾಜರಾಗಲು ಸೂಚಿಸಲಾಗಿದೆ.
ಗಣಿತ, ವಿಜ್ಞಾನ, ಕಂಪ್ಯೂಟರ್ ಸೈನ್ಸ್ ಹಾಗೂ ಹಿಂದಿ ವಿಷಯಗಳ ಅಭ್ಯರ್ಥಿಗಳಿಗೆ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ಸಾಮಾನ್ಯ-24) ಪ್ರಾತ್ಯಕ್ಷಿಕೆ ನಡೆಯಲಿದೆ. ಇಂಗ್ಲಿಷ್, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳ ಅಭ್ಯರ್ಥಿಗಳಿಗೆ ಚಿತ್ರದುರ್ಗ ನಗರದ ಸೀಬಾರದ ಎನ್.ಹೆಚ್-4 ಕೇತೇಶ್ವರ ಮಠದ ಸಮೀಪದ ಇರುವ ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ (ಪ. ವರ್ಗ-59) ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.