
ಮಧುಗಿರಿ, 13 ಜೂನ್ (ಹಿ.ಸ.) :
ಆ್ಯಂಕರ್ : ಮಧುಗಿರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ನಿರ್ಮಿಸಲಾದ ಮೂರು ಪ್ರಮುಖ ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಸಚಿವ ಟಿ.ಬಿ. ರಾಜಣ್ಣ ಉದ್ಘಾಟಿಸಿದರು.
ದೊಡ್ಡೇರಿ ಹೋಬಳಿಯ ಶಂಕರಪುರ–ಜಕ್ಕೇನಹಳ್ಳಿ ಸಮೀಪ ಸುವರ್ಣಮುಖಿ ನದಿಗೆ, ಕೊಡಿಗೇನಹಳ್ಳಿ ಹೋಬಳಿಯ ಕಲಿದೇವಪುರ–ತಿಂಗಳೂರು ಸಮೀಪ ಕುಮುದ್ವತಿ ನದಿಗೆ ಹಾಗೂ ಮುದ್ದೇನಹಳ್ಳಿ ಗ್ರಾಮದ ಸಮೀಪ ಜಯಮಂಗಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ8 ಸಚಿವ ರಾಜಣ್ಣ, ನದಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸುತ್ತಮುತ್ತಲಿನ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದರ ಜೊತೆಗೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳ ನೀರಿನ ಭದ್ರತೆ ಮತ್ತು ಕೃಷಿ ಅಭಿವೃದ್ಧಿಗೆ ಇಂತಹ ಕಾಮಗಾರಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ, ಎಇಇ ತಿಪ್ಪೇಶ್ವಾಮಿ, ಇಇ ಸುರೇಶ್ ಮೇಟಿ, ಸಹಾಯಕ ಇಂಜಿನಿಯರ್ ಮಂಜುಕಿರಣ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆದಿನಾರಾಯಣ ರೆಡ್ಡಿ ಹಾಗೂ ಗೋಪಾಲಯ್ಯ, ಕೆಎಂಎಫ್ ಮಾಜಿ ನಿರ್ದೇಶಕ ಕಾಂತರಾಜು, ಪುರಸಭೆಯ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.