
ವಿಜಯಪುರ, 24 ಜೂನ್ (ಹಿ.ಸ.) :
ಆಂಕರ್ : ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಜಮೀನು ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಅವರ ಕುಟುಂಬ ಅಲ್ಲಿ ನಮ್ಮ ಜಮೀನು ಇಲ್ಲ ಎಂದು ಸ್ಪಷ್ಟನೆ ನೀಡಬೇಕು. ಒಂದು ವೇಳೆ ಅಲ್ಲಿ ಜಮೀನು ಇಲ್ಲದಿದ್ದರೆ ನನ್ನ ಹೇಳಿಕೆ ಹಿಂಪಡೆಯುತ್ತೇನೆ. ಜೊತೆಗೆ ಅವರಿಗೆ ನೋವಾಗಿದ್ದರೆ, ನಾನು ವಿಷಾದ ವ್ಯಕ್ತಪಡಿಸುತ್ತೇನೆಂದು ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.
ವಿಜಯಪುರದ ಅವರ ನಿವಾಸದಲ್ಲಿ ಈ ಕುರಿತು ಮಾತನಾಡಿದ ಸಚಿವ ಪಾಟೀಲ್, ಬಿಡದಿ ಟೌನ್ಶಿಪ್ ಪ್ರದೇಶದಲ್ಲಿ ತಮ್ಮ ಜಮೀನು ಇಲ್ಲ ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದರೆ ಯಾವುದೇ ವಿವಾದ ಇರುವುದಿಲ್ಲ. ಆದರೆ ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಜಮೀನು ಇರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದರು. ಈಗ ಅಲ್ಲಿ ಜಮೀನು ಇದ್ದರೆ ಅದು ಬೇರೆ ವಿಚಾರ, ಇಲ್ಲ ಎಂದು ಸ್ಪಷ್ಟಪಡಿಸಿದರೆ ಈ ವಿವಾದಕ್ಕೆ ತೆರೆ ಬೀಳುತ್ತದೆ ಎಂದು ಸಚಿವರು ಹೇಳಿದ್ದಾರೆ.
“ಬಿಡದಿ ಟೌನ್ಶಿಪ್ ಜಾಗದಲ್ಲಿ ಅನಿತಾ ಕುಮಾರಸ್ವಾಮಿ ಅವರ ಜಮೀನು ಇಲ್ಲ ಎಂದು ಹೇಳಿದರೆ ಸಮಸ್ಯೆ ಮುಗಿಯುತ್ತದೆ. ಅದನ್ನು ಬಿಟ್ಟು ನಿಖಿಲ್ ಕುಮಾರಸ್ವಾಮಿ ಅವರು ಸವಾಲು ಹಾಕುತ್ತೇನೆ, ಕ್ಷಮೆ ಕೇಳಬೇಕು ಎಂದು ಹೇಳುವುದು ಸರಿಯಲ್ಲ. ಒಂದು ವೇಳೆ ಅಲ್ಲಿ ಅವರ ಜಮೀನು ಇಲ್ಲ ಎಂಬುದು ಸಾಬೀತಾದರೆ, ನನ್ನ ಹೇಳಿಕೆಯಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಹೇಳಿದರು.
ಬಿಡದಿ ಟೌನ್ಶಿಪ್ ವಿಚಾರ ಕಳೆದ 20 ವರ್ಷಗಳಿಂದ ವಿವಿಧ ರಾಜಕೀಯ ಪಕ್ಷಗಳ ನಡುವೆ ಚರ್ಚೆಯ ವಿಷಯವಾಗಿದೆ. 2006ರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು. ಆದರೆ ಅಂದಿನ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈಗ ರಾಜಕೀಯ ಕಾರಣಗಳಿಗಾಗಿ ಈ ವಿಚಾರವನ್ನು ಮತ್ತೆ ಮುನ್ನೆಲೆಗೆ ತರಲಾಗಿದೆ ಎಂದು ಎಂ.ಬಿ. ಪಾಟೀಲ ಆರೋಪಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜೆಡಿಎಸ್ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಸಚಿವರು ಟೀಕಿಸಿದರು.
“ಜೆಡಿಎಸ್ ಅಧಿಕಾರದಲ್ಲಿದ್ದಾಗಲೇ ಬಿಡದಿ ಟೌನ್ಶಿಪ್ ಯೋಜನೆಗೆ ಅವಕಾಶ ನೀಡಬಹುದಿತ್ತು. ಆದರೆ ಈಗ ಈ ವಿಚಾರವನ್ನು ಎತ್ತಿಕೊಂಡಿರುವುದಕ್ಕೆ ಬೇರೆ ಕಾರಣಗಳಿವೆ. ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಅಲ್ಲಿ ಜಮೀನು ಇರುವುದರಿಂದಲೇ ಜೆಡಿಎಸ್ ಈ ರೀತಿಯ ಆರೋಪಗಳನ್ನು ಮಾಡುತ್ತಿದೆ ಎಂದು ನಾನು ಹೇಳಿದ್ದೆ” ಎಂದು ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.
ಬಿಡದಿ ಟೌನ್ಶಿಪ್ ಕುರಿತಾದ ಜಮೀನು ಮಾಲೀಕತ್ವದ ವಿಚಾರದಲ್ಲಿ ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ಅಂತ್ಯ ಹಾಡಬೇಕು ಎಂಬುದು ಸಚಿವರ ಅಭಿಪ್ರಾಯವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande