
ಕೊಪ್ಪಳ, 27 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ವಾರ್ಷಿಕ ಕ್ರೀಡಾಕೂಟವನ್ನು ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠಲ್ ಜಾಬ್ ಗೌಡ ಅವರು ಟಾಸ್ ಮಾಡುವ ಮೂಲಕ ಪಂದ್ಯಾವಳಿಗೆ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ಕ್ರೀಡಾಪಟುಗಳ ಪರಿಚಯ ಮಾಡಿಕೊಂಡು ಮಾತನಾಡಿದ ಅವರು, ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಪ್ರತಿ ವರ್ಷವೂ ನಮ್ಮ ಕ್ರೀಡಾಂಗಣದಲ್ಲಿ ಅತ್ಯಂತ ಆಸಕ್ತಿಯಿಂದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ, ಅಚ್ಚುಕಟ್ಟಾಗಿ ಪಂದ್ಯಗಳನ್ನು ಆಡುತ್ತಾರೆ. ಅವರಿಗೆ ನಮ್ಮ ಇಲಾಖೆಯ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಅವರು ಸಾಂಕೇತಿಕವಾಗಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ರಾಜು ಬಿ.ಆರ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ. ನಾಗರಾಜ್, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ವೀರಣ್ಣ ಹಳ್ಳಿಮನಿ, ಜಿಲ್ಲಾ ಕಾರ್ಯದರ್ಶಿ ರುದ್ರಗೌಡ ಪಾಟೀಲ್, ಜಿಲ್ಲಾ ಖಜಾಂಚಿ ಫಕೀರಪ್ಪ ಗೋಟೂರ, ಹಿರಿಯ ಪತ್ರಕರ್ತರಾದ ಎಂ. ಸಾಧಿಕ್ ಅಲಿ, ಜಿ.ಎಸ್. ಗೋನಾಳ, ಎಚ್.ಎಸ್. ಹರೀಶ್, ಕ್ರೀಡಾ ಇಲಾಖೆಯ ತುಕರಾಮ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶಿವಾನಂದ ಗಾಡದಿನ್ನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್