
ನವದೆಹಲಿ, 28 ಜೂನ್ (ಹಿ.ಸ.) :
ಆ್ಯಂಕರ್ : ಕರಾಚಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಮಾಡಿರುವ ಆರೋಪಗಳನ್ನು ಭಾರತ ಸರ್ಕಾರ ಸಂಪೂರ್ಣವಾಗಿ ತಳ್ಳಿ ಹಾಕಿದೆ. ಈ ಆರೋಪಗಳು ಆಧಾರರಹಿತ ಹಾಗೂ ನಿರಾಧಾರ ಎಂದು ಸ್ಪಷ್ಟಪಡಿಸಿರುವ ಭಾರತ, ಇತರರ ಮೇಲೆ ಆರೋಪ ಮಾಡುವ ಬದಲು ತನ್ನ ನೆಲೆಯಲ್ಲಿರುವ ಉಗ್ರಗಾಮಿ ಜಾಲದ ವಿರುದ್ಧ ವಿಶ್ವಾಸಾರ್ಹ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.
ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತ, ಕರಾಚಿಯ ಇತ್ತೀಚಿನ ಘಟನೆಯ ಕುರಿತು ಪಾಕಿಸ್ತಾನದ ವರದಿಗಳಲ್ಲಿ ಭಾರತ ವಿರುದ್ಧ ಆಧಾರವಿಲ್ಲದ ಆರೋಪಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.
ಭಾರತ ಈ ಎಲ್ಲ ಆರೋಪಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತದೆ ಎಂದು ತಿಳಿಸಿದ ಅವರು, ಪಾಕಿಸ್ತಾನವು ಇತರರತ್ತ ಬೆರಳು ತೋರಿಸುವ ಬದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಅಲ್ಲದೆ, ತನ್ನ ದೇಶದಲ್ಲಿ ನೆಲೆಸಿರುವ ಉಗ್ರಗಾಮಿ ಮೂಲಸೌಕರ್ಯ ಮತ್ತು ಸಂಘಟನೆಗಳ ವಿರುದ್ಧ ವಿಶ್ವಾಸಾರ್ಹ ಹಾಗೂ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಪಾಕಿಸ್ತಾನದ ಜವಾಬ್ದಾರಿಯಾಗಿದೆ ಎಂದು ಅವರು ಒತ್ತಿ ಹೇಳಿದರು.
ಇದೇ ವೇಳೆ, ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ ಬಳಸುವ ಪ್ರವೃತ್ತಿಯನ್ನು ಪಾಕಿಸ್ತಾನ ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಭಾರತ ಕಟುವಾಗಿ ಎಚ್ಚರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.