
ಕಾರವಾರ, 17 ಜುಲೈ (ಹಿ.ಸ.):
ಆ್ಯಂಕರ್:
ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಮಾದಕ ವ್ಯಸನ ಮುಕ್ತ ‘ಆಪರೇಷನ್ ರೈಸ್’ ಜಾಗೃತಿ ಕಾರ್ಯಕ್ರಮ ನಡೆಯಿತು.
‘ಬೇಡ ಸ್ನೇಹಿತಾ, ಮಾದಕ ದ್ರವ್ಯಗಳಿಗೆ ಇಲ್ಲ ಎಂದು ಹೇಳಿ’ ಎಂಬ ಧ್ಯೇಯವಾಕ್ಯದಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ, ಮಾದಕ ವ್ಯಸನದಿಂದ ದೂರವಿರುವ ಸಂಕಲ್ಪದೊಂದಿಗೆ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ‘ಮಾದಕ ವ್ಯಸನಕ್ಕೆ ಇಲ್ಲ ಎನ್ನಿ – ಆರೋಗ್ಯಕರ ಬದುಕಿಗೆ ಹೌದು ಎನ್ನಿ’, ‘ಕ್ಷಣಿಕ ಸುಖಕ್ಕಾಗಿ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ’, ‘ಯುವಶಕ್ತಿಯೇ ದೇಶದ ಶಕ್ತಿ – ಮಾದಕ ದ್ರವ್ಯ ಮುಕ್ತ ಸಮಾಜ ನಮ್ಮ ಗುರಿ’, ‘ಜೀವನ ಅಮೂಲ್ಯ – ಮಾದಕ ದ್ರವ್ಯಗಳಿಂದ ದೂರವಿರಿ’ ಸೇರಿದಂತೆ ವಿವಿಧ ಜಾಗೃತಿ ಘೋಷಣೆಗಳನ್ನು ಮೊಳಗಿಸಲಾಯಿತು.
ಯುವಜನರು ಮಾದಕ ದ್ರವ್ಯಗಳ ಆಕರ್ಷಣೆಗೆ ಒಳಗಾಗದೆ ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಜೀವನ ಮೌಲ್ಯಗಳತ್ತ ಗಮನಹರಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.