
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ.
ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ವಂಬಟ್ಕೆರೆ ಹಾಗೂ ಲೇಖಕಿ ಸಬೀಹಾ ಭೂಮಿಗೌಡ ಅರ್ಜಿ ಸಲ್ಲಿಸಿದ್ದರು. ಬಿಎಲ್ಒಗಳಿಗೆ ಸಮರ್ಪಕ ತರಬೇತಿ ಮತ್ತು ಮಾಹಿತಿ ಕೊರತೆಯಿಂದ ಲಕ್ಷಾಂತರ ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಅರ್ಜಿದಾರರ ಪರ ವಕೀಲ ವಿಕ್ರಮ ಹುಯಿಲಗೋಳ ವಾದ ಮಂಡಿಸಿದರು.
ಈ ವೇಳೆ ಚುನಾವಣಾ ಆಯೋಗದ ಪರ ವಕೀಲರು, ಅಗತ್ಯವಿದ್ದರೆ ಎಸ್ಐಆರ್ ಅವಧಿ ವಿಸ್ತರಿಸಲಾಗುವುದು ಹಾಗೂ ಕರಡು ಪಟ್ಟಿ ಪ್ರಕಟವಾದ ಬಳಿಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ ಮತದಾರರ ಹಕ್ಕು ರಕ್ಷಿಸುವಂತೆ ಆಯೋಗಕ್ಕೆ ಮನವಿ ಮಾಡಿದೆ ಎಂದು ತಿಳಿಸಿದರು.
ಈ ವಿಚಾರವು ಸುಪ್ರೀಂಕೋರ್ಟ್ನಲ್ಲಿಯೂ ಪರಿಶೀಲನೆಯಲ್ಲಿರುವ ಹಿನ್ನೆಲೆಯಲ್ಲಿ, ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠವು ಅರ್ಜಿಯನ್ನು ಇತ್ಯರ್ಥಪಡಿಸಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.