
ಬೆಂಗಳೂರು, 29 ಜುಲೈ (ಹಿ.ಸ.):
ಆ್ಯಂಕರ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಾಗೂ ಮಲ್ಲೇಶ್ವರ ಸೇರಿದಂತೆ ವಿವಿಧಡೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ಜಲಾಶಯಗಳಲ್ಲಿ ಕುಡಿಯುವ ನೀರಿಗೂ ಪರದಾಡುವಂತಹ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವುದು ಕರ್ನಾಟಕದ ರೈತರಿಗೆ ಬರೆಯುವ 'ಮರಣಶಾಸನ'ವಿದ್ದಂತೆ ಎಂದು ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದಿರುವಾಗ ಪಕ್ಕದ ರಾಜ್ಯಕ್ಕೆ ನೀರು ಬಿಡುವುದು ಎಷ್ಟು ಸರಿ? ಎಂದು ಕರವೇ ಮುಖಂಡರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜಕೀಯ ಹಿತಾಸಕ್ತಿಗಾಗಿ ಕನ್ನಡಿಗರ ಹಾಗೂ ರಾಜ್ಯದ ಹಿತವನ್ನು ಬಲಿ ಕೊಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್ 3ರಂದು ತಮಿಳುನಾಡು ಮುಖ್ಯಮಂತ್ರಿಗಳು ಬೆಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ, ಮಹತ್ವದ ಸಭೆಗೂ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಕನ್ನಡಿಗರ ಹಿತರಕ್ಷಣೆಗೆ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII