ಎಸ್ಐಆರ್ ನಲ್ಲಿ ಗುಂಪು ನೋಂದಣಿ ನಡೆದಿಲ್ಲ ಎಂಬ ಸಿಇಒ ಹೇಳಿಕೆ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ
Union Minister H.D. Kumaraswamy alleged irregularities in Karnataka's Special Intensive Revision (SIR) of electoral rolls, questioned the Chief Electoral Officer's denial of group enrolments, and urged the Election Commission to order fresh enumera
ಎಸ್ಐಆರ್ನಲ್ಲಿ ಗುಂಪು ನೋಂದಣಿ ನಡೆದಿರುವುದಕ್ಕೆ ದಾಖಲೆಗಳಿವೆ


ಬೆಂಗಳೂರು, 09 ಜುಲೈ (ಹಿ.ಸ.)

ಆ್ಯಂಕರ್:

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಗುಂಪುಗಳಾಗಿ ಮತದಾರರ ನೋಂದಣಿ ನಡೆದಿಲ್ಲ ಎಂಬ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಗುರುವಾರ ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ಹಲವು ಕಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.

ಎಸ್ಐಆರ್ ವೇಳೆ ಗುಂಪು ಸೇರಿಸಿ ನೋಂದಣಿ ನಡೆಸಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿಕೆ ನೀಡಿದ್ದಾರೆ. ಆದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ನಾವು ನಿಯೋಗದ ರೂಪದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ. ರಾಮನಗರ, ಯಶವಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ಗುಂಪು ಸೇರಿಸಿ ಎಸ್ಐಆರ್ ನಡೆಸಿರುವುದಕ್ಕೆ ದಾಖಲಾತಿ ಸಮೇತ ಸಾಕ್ಷ್ಯಗಳನ್ನು ನೀಡಿದ್ದೇವೆ, ಎಂದು ಕುಮಾರಸ್ವಾಮಿ ಹೇಳಿದರು.

ಎಸ್ಐಆರ್ ಪ್ರಕ್ರಿಯೆ ಸರಿಯಾಗಿ ನಡೆದಿದ್ದರೆ, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಡಿ 35 ಬೂತ್ ಮಟ್ಟದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಏಕೆ ನೋಟಿಸ್ ನೀಡಿದೆ ಎಂದು ಅವರು ಪ್ರಶ್ನಿಸಿದರು.

ಬುಧವಾರ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗುಂಪು ಸೇರಿಸಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ್ದರು.

ಇದೇ ವೇಳೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಸರ್ಕಾರ ಅಕ್ರಮ ಎಸಗಿದೆ ಎಂದು ಆರೋಪಿಸಿರುವ ಎನ್ಡಿಎ, ಅಕ್ರಮಗಳು ನಡೆದಿವೆ ಎನ್ನಲಾದ ರಾಜ್ಯದ ಕೆಲವು ಭಾಗಗಳಲ್ಲಿ ಮರು ಮತದಾರರ ಗಣತಿ ನಡೆಸುವಂತೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande