
ನವದೆಹಲಿ, 26 ಆಗಸ್ಟ್ (ಹಿ.ಸ.):
ಆ್ಯಂಕರ್:ನೇಪಾಳದಲ್ಲಿ ಭಾರಿ ಮಳೆ ಹಾಗೂ ಹಠಾತ್ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಪ್ರವಾಹ ಪೀಡಿತರಿಗೆ ನೆರವು ನೀಡಲು ಭಾರತ ಸರ್ಕಾರ ಶೀಘ್ರದಲ್ಲೇ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಸಿದ್ಧತೆ ನಡೆಸುತ್ತಿದೆ.
ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರವಾಹದಿಂದ ತೊಂದರೆಗೊಳಗಾದ ಭಾರತೀಯ ನಾಗರಿಕರ ನೆರವಿಗಾಗಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಭಾರತೀಯ ನಾಗರಿಕರು +977 985 131 6807 ಮತ್ತು +977 970 910 7500 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.
ಟಿಬೆಟ್ ಗಡಿ ಸಮೀಪದ ರಸುವಾ ಜಿಲ್ಲೆಯಲ್ಲಿ ಬುಧವಾರ ಭೋಟೆ ಕೋಶಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಟಿಬೆಟಿಯನ್ ಪ್ರದೇಶದಲ್ಲಿ ಹಿಮನದಿಯ ನೀರಿನ ಪ್ರಮಾಣ ಏಕಾಏಕಿ ಹೆಚ್ಚಳವಾಗಿರುವುದು ಅಥವಾ ಹಿಮಪಾತ ಸಂಭವಿಸಿರುವುದು ಪ್ರವಾಹಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಪ್ರವಾಹದಿಂದ ಹಲವು ಗ್ರಾಮಗಳು, ರಸ್ತೆಗಳು, ಸೇತುವೆಗಳು ಹಾಗೂ ಜಲವಿದ್ಯುತ್ ಯೋಜನೆಗಳಿಗೆ ಹಾನಿಯಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ 8ರಿಂದ 9 ಮಂದಿ ಮೃತಪಟ್ಟಿದ್ದು, 380ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಸುಮಾರು 105 ಮಂದಿ ಭಾರತೀಯ ನಾಗರಿಕರೂ ಸೇರಿದ್ದಾರೆ ಎನ್ನಲಾಗಿದೆ.
ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದ್ದು, ಪ್ರವಾಹದಿಂದ ತೊಂದರೆಗೊಳಗಾದ ಭಾರತೀಯರು ಹಾಗೂ ಅವರ ಕುಟುಂಬಸ್ಥರಿಗೆ ಅಗತ್ಯ ನೆರವು ಒದಗಿಸಲು ಸಂಪರ್ಕ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.