
ಬೆಂಗಳೂರು, 30 ಆಗಸ್ಟ್ (ಹಿ.ಸ.):
ಆ್ಯಂಕರ್:ಗೃಹಲಕ್ಷ್ಮಿ ಯೋಜನೆಯ ಮೂರು ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, “ಯಾವ ಪುರುಷಾರ್ಥಕ್ಕಾಗಿ ಈ ಸಂಭ್ರಮ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ?” ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಚುನಾವಣಾ ಸಂದರ್ಭದಲ್ಲಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಮಹಿಳೆಯರ ಬಾಕಿ ಹಣ ಪಾವತಿಸದೆ ಸಂಭ್ರಮಾಚರಣೆ ನಡೆಸುತ್ತಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ₹225 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಮಹಾಲೇಖಪಾಲರ ವರದಿ ಉಲ್ಲೇಖಿಸಿರುವ ಅಶೋಕ್, 2.88 ಲಕ್ಷ ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿ, ಮೃತರ ಖಾತೆಗಳಿಗೆ ₹115 ಕೋಟಿ ಜಮೆ ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಇಲ್ಲದೆ 23,262 ಪಾವತಿಗಳ ಮೂಲಕ ₹46.52 ಕೋಟಿ ಪಾವತಿಸಿರುವ ಆರೋಪಗಳನ್ನು ಮಾಡಿದ್ದಾರೆ.
ಅಲ್ಲದೆ, 10 ಲಕ್ಷಕ್ಕೂ ಹೆಚ್ಚು ಬೋಗಸ್ ಖಾತೆಗಳಿಗೆ ಫಲಾನುಭವಿಗಳನ್ನು ಸಂಪರ್ಕಿಸಿರುವ ಆರೋಪವಿದ್ದು, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು ₹5,000 ಕೋಟಿ ಬಾಕಿ ಹಣವನ್ನು ಮಹಿಳೆಯರಿಗೆ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.
“ಇದು ಗೃಹಲಕ್ಷ್ಮಿಯ ಯಶೋಗಾಥೆಯಲ್ಲ, ಕಾಂಗ್ರೆಸ್ ಸರ್ಕಾರದ ಅವ್ಯವಹಾರ, ಅಕ್ರಮ ಮತ್ತು ಲೂಟಿಯ ಯಶೋಗಾಥೆ” ಎಂದು ಅಶೋಕ್ ಕಿಡಿಕಾರಿದ್ದಾರೆ.
ಮೊದಲು ಬಾಕಿ ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಬೇಕು, ₹225 ಕೋಟಿ ಅಕ್ರಮ ಸೇರಿದಂತೆ ಮೃತರ ಖಾತೆಗಳಿಗೆ ಹಣ ವರ್ಗಾವಣೆಯ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಮಾತು ಕೊಟ್ಟು ಮಹಿಳೆಯರಿಗೆ ಮೋಸ ಮಾಡುವುದು ಗ್ಯಾರಂಟಿ ಅಲ್ಲ. ಇದು ಕರ್ನಾಟಕದ ಸ್ವಾಭಿಮಾನಿ ಮಹಿಳೆಯರಿಗೆ ಕಾಂಗ್ರೆಸ್ ಮಾಡಿರುವ ನಂಬಿಕೆ ದ್ರೋಹ ಮತ್ತು ವಂಚನೆ” ಎಂದು ಆರ್. ಅಶೋಕ್ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.