
ಬೆಂಗಳೂರು, 31 ಆಗಸ್ಟ್ (ಹಿ.ಸ.):
ಆ್ಯಂಕರ್:
ನ್ಯಾಯಾಂಗ ಶ್ರೇಷ್ಠ. ನ್ಯಾಯಮೂರ್ತಿಗಳನ್ನು ಗೌರವದಿಂದ ನಡೆಸಿಕೊಳ್ಳಬೇಕು. ನ್ಯಾಯಮೂರ್ತಿಗಳಿಗೆ ಆಭಾಸವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದ ಸಭಾಂಗಣದಲ್ಲಿ ಸೋಮವಾರ ಕೆ.ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹೊಸನ್ಯಾಯಾಲಯ ಸಂಕೀರ್ಣ ಅರಸಿಕೆರೆ ಮತ್ತು ಚನ್ನರಾಯಪಟ್ಟಣ ತಾಲ್ಲೂಕು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
20ನೇ ತಾರೀಕು ಅರಸೀಕೆರೆ ಕೋರ್ಟ್ ಉದ್ಘಾಟನೆಗೆ ನಿರ್ದೇಶನ ನೀಡಿದ ಸಚಿವರು, ಅರಸಿಕೆರೆ ಇತಿಹಾಸದಲ್ಲೇ ಒಂದು ಒಳ್ಳೆ ಕೋರ್ಟ್ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಸೆ. 6ರಂದು ಸಭೆ ಸೇರಿ ಉದ್ಘಾಟನಾ ಕಾರ್ಯಕ್ರಮಗಳ ಅಂತಿಮ ರೂಪುರೇಷೆಗಳನ್ನು ನಿರ್ಧರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕೆಲಸಗಳನ್ನು ಮಾಡಬೇಕು. ಈಗಾಗಲೇ ಸಾಕಷ್ಟು ತಡವಾಗಿದೆ. ವಿಳಂಬ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯುತ್ ಸಂಪರ್ಕ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲು ಸಿದ್ಧನಿದ್ದೇನೆ ಎಂದರು.
ಉದ್ಘಾಟನೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆಸಿ, ಅಗತ್ಯ ಸಹಕಾರ ಮಾಡಲು ಸಿದ್ಧನಿದ್ದೇನೆ. ಕಾರ್ಯಕ್ರಮವನ್ನು ಬಹಳ ಚೆನ್ನಾಗಿ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ವೇಳೆ, ಹಾಸನ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆ ನೀಡಿದ್ದೇನೆ. ಪ್ರಮುಖವಾಗಿ ವಿಮಾನ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಮತ್ತಿತರ ಮಹತ್ವದ ಕಾರ್ಯಕ್ರಮಗಳನ್ನು ನಡೆಸುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದರು.
ಸಭೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ, ನ್ಯಾಯವಾದಿಗಳ ಪ್ರತಿನಿಧಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.