
ದಾವಣಗೆರೆ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಮಂಗಳವಾರ ಜಲಸಂಘರ್ಷ ಹೋರಾಟ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾದರು.
ಪ್ರತಿಭಟನಾಕಾರರು ಒಲೆ ಹಾಗೂ ಪಾತ್ರೆಗಳನ್ನು ತಂದು ಹೆದ್ದಾರಿ ಬಳಿ ಅಡುಗೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವು ರೈತರನ್ನು ವಶಕ್ಕೆ ಪಡೆದರು. ಬಳಿಕ ಪೊಲೀಸ್ ಡಿಆರ್ ಮೈದಾನದಿಂದ ರೇಣುಕಾಚಾರ್ಯ ಅವರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ರೈತರು ಕೂಡ ಅವರೊಂದಿಗೆ ಸಾಗಿದರು.
ಜಿಲ್ಲಾಧಿಕಾರಿ ಕಚೇರಿ ತಲುಪಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಭದ್ರಾ ಬಲದಂಡೆ ನಾಲೆಗೆ ತಕ್ಷಣ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ರೈತರ ಬೆಳೆಗಳಿಗೆ ನೀರು ಅತ್ಯಗತ್ಯವಾಗಿದ್ದು, ಭದ್ರಾ ಬಲದಂಡೆ ನಾಲೆಗೆ ಕೂಡಲೇ ನೀರು ಹರಿಸಬೇಕು. ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R